ಜಿಬಿಎ
ಬೆಂಗಳೂರು: ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಮೂದಿಸಿರುವ ವಾರ್ಡ್ ಗಡಿಗಳನ್ನು ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರ ಪಾಲಿಕೆ ಮತದಾರರ ಕರಡು ಪಟ್ಟಿಯ ಪರಿಶೀಲನೆಗೆ ಸಂಬಂಧಿಸಿದ ಪ್ರಮಾಣಿತ ಕಾರ್ಯವಿಧಾನ (ಎಸ್ಒಪಿ) ಕುರಿತು ಆಯೋಜಿಸಲಾದ ಸಭೆಯಲ್ಲಿ ಅವರು ಮಾತನಾಡಿದರು.
ಅಧಿಸೂಚನಾ ವಾರ್ಡ್ ವಿವರಣೆಗಳಿಗೆ ಅನುಗುಣವಾಗಿ ಗಡಿಗಳನ್ನು ಸರಿಪಡಿಸಿ, ದೀರ್ಘಾವಧಿಯಲ್ಲಿ ವ್ಯವಸ್ಥಿತ ಸರ್ವೆ ಮೂಲಕ ಪರಿಶೀಲನೆ ಕೈಗೊಳ್ಳುವಂತೆ ಐಟಿ ವಿಭಾಗದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.
ಪ್ರತಿ ನಗರ ಪಾಲಿಕೆಯಲ್ಲಿ ಒಬ್ಬ ತಹಶೀಲ್ದಾರ್, ಒಬ್ಬ ವ್ಯವಸ್ಥಾಪಕ, ಒಬ್ಬ ಎಫ್ಡಿಎ, ಒಬ್ಬ ಎಸ್ಡಿಎ ಹಾಗೂ ಒಬ್ಬ ಡೇಟಾ ಎಂಟ್ರಿ ಆಪರೇಟರ್ ಹೊಂದಿರುವ ಚುನಾವಣಾ ವಿಭಾಗವನ್ನು ರಚಿಸುವಂತೆ ಮುಖ್ಯ ಆಯುಕ್ತರು ನಿರ್ದೇಶಿಸಿದರು.
ಮತಗಟ್ಟೆಗಳ ಒಟ್ಟು ಸಂಖ್ಯೆ, ನಗರ ಪಾಲಿಕೆಗಳ ಒಳಗೆ ವಿಭಜಿತವಾದ ವಾರ್ಡ್ಗಳು ಹಾಗೂ ನಗರ ಪಾಲಿಕೆಗಳ ನಡುವೆ ವಿಭಜಿತವಾದ ವಾರ್ಡ್ಗಳಿಗೆ ಸಂಬಂಧಿಸಿದ ಡೇಟಾ ಸಮಸ್ಯೆಗಳನ್ನು ಪರಿಹರಿಸುವ ಸಲುವಾಗಿ ಹಾಗೂ ಜಿಬಿಎ ಚುನಾವಣಾ ವಿಭಾಗದೊಂದಿಗೆ ಸಮನ್ವಯ ಸಾಧಿಸಬೇಕು. ಇದಕ್ಕಾಗಿ ಐದು ನಗರ ಪಾಲಿಕೆಗಳಲ್ಲಿಯೂ ಕಂದಾಯದ ಹೆಚ್ಚುವರಿ ಆಯುಕ್ತರನ್ನು ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲು ಸೂಚಿಸಿದರು.
ಮತದಾರರ ಪಟ್ಟಿ ಮಾಹಿತಿಯ ಆಧಾರದ ಮೇಲೆ ಎಲ್ಲಾ ವಾರ್ಡ್ಗಳನ್ನು, ವಿಶೇಷವಾಗಿ ವಿಭಜಿತ ವಾರ್ಡ್ಗಳನ್ನು, ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ಮತದಾರರ ನೋಂದಣಾಧಿಕಾರಿಗಳು ಸೂಕ್ಷ್ಮವಾಗಿ ಪರಿಶೀಲಿಸಬೇಕು. ವಿಭಜಿತ ವಾರ್ಡ್ಗಳಿಗೆ ಸಂಬಂಧಿಸಿದ ಮಾಹಿತಿಯ ನಿಖರತೆಯನ್ನು ನಗರ ಪಾಲಿಕೆ ಆಯುಕ್ತರು ಸ್ವತಂತ್ರವಾಗಿ ಪರಿಶೀಲಿಸಿ ದೃಢೀಕರಿಸುವಂತೆ ನಿರ್ದೇಶಿಸಿದರು.
ಚುನಾವಣೆ ವಿಭಾಗದ ವಿಶೇಷ ಆಯುಕ್ತರಾದ ರಾಮಚಂದ್ರನ್ ಮಾತನಾಡಿ, ನಗರ ಪಾಲಿಕೆ ಮತದಾರರ ಕರಡು ಪಟ್ಟಿಯ ಪರಿಶೀಲನೆಯ ವೇಳೆ ನಿಖರತೆ, ಪಾರದರ್ಶಕತೆ ಹಾಗೂ ವಿಶ್ವಾಸಾರ್ಹತೆಯನ್ನು ಖಚಿತಪಡಿಸಲು ಏಕರೂಪವಾದ ಪ್ರಮಾಣಿತ ಕಾರ್ಯವಿಧಾನವನ್ನು (ಎಸ್ಒಪಿ) ಕಟ್ಟುನಿಟ್ಟಾಗಿ ಅನುಸರಿಸುವುದು ಅತ್ಯಂತ ಅಗತ್ಯವೆಂದು ತಿಳಿಸಿದರು.
ನಗರ ಪಾಲಿಕೆಗಳ ಆಯುಕ್ತರಾದ ರಾಜೇಂದ್ರ ಚೋಳನ್, ಪೊಮ್ಮಲ ಸುನೀಲ್ ಕುಮಾರ್, ರಮೇಶ್ ಡಿ.ಎಸ್, ರಮೇಶ್ ಕೆ.ಎನ್, ಕಂದಾಯ ವಿಭಾಗದ ಹೆಚ್ಚುವರಿ ಆಯುಕ್ತರಾದ ಮಂಜುನಾಥ ಸ್ವಾಮಿ, ರಂಗನಾಥ್, ಪ್ರಜ್ಞಾ ಅಮ್ಮೆಂಬಳ, ರಾಚಪ್ಪ, ಅಮರೇಶ್, ಸಹಾಯಕ ಆಯುಕ್ತ ಎಂ.ಶ್ರೀನಿವಾಸ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.