ಬೆಂಗಳೂರು: ‘ಸಾರ್ವಜನಿಕರಿಂದ ಸಲಹೆ ಪಡೆದು ಗ್ರೇಟರ್ ಬೆಂಗಳೂರಿಗೆ ಕನ್ನಡದ ಹೆಸರಿಡಿ’ ಎಂದು ಸರ್ಕಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಆಗ್ರಹಿಸಿದ್ದಾರೆ.
‘ನಾಲ್ಕು ದಿಕ್ಕುಗಳಲ್ಲಿ ಅತಿ ವೇಗವಾಗಿ ವಿಸ್ತರಣೆಯಾಗುತ್ತಿರುವ ಬೆಂಗಳೂರು ನಗರದ ಆಡಳಿತವನ್ನು ಸಮರ್ಪಕವಾಗಿ ನಿರ್ವಹಿಸಲು ಸರ್ಕಾರವು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿರುವುದು ಸ್ವಾಗತಾರ್ಹ. ಆದರೆ, ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ’ ಎನ್ನುವ ಹೆಸರು ಹೆಚ್ಚಾಗಿ ಆಂಗ್ಲ ಭಾಷೆಯನ್ನು ಪ್ರತಿಬಿಂಬಿಸುತ್ತಿದ್ದು, ಇದಕ್ಕೆ ಇನ್ನಷ್ಟು ಕನ್ನಡತನದ ಅವಶ್ಯವಿದೆ. ಈ ಅಂಶವನ್ನು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗಿದೆ’ ಎಂದು ತಿಳಿಸಿದ್ದಾರೆ.
‘ಈ ಪ್ರಾಧಿಕಾರಕ್ಕೆ ಕನ್ನಡ ಪದ ಬಳಸುವ ನಿಟ್ಟಿನಲ್ಲಿ ಸರ್ಕಾರವು ಗಂಭೀರವಾಗಿ ಆಲೋಚಿಸಬೇಕಿದ್ದು, ಸಾರ್ವಜನಿಕರಿಂದ ಸೂಕ್ತ ಹೆಸರನ್ನು ಸೂಚಿಸಲು ಸಲಹೆಗಳನ್ನು ಆಹ್ವಾನಿಸಬೇಕು. ಸಾರ್ವಜನಿಕರು ಸೂಚಿಸಿದ ಹೆಸರಲ್ಲಿ ಅತ್ಯುತ್ತಮವಾದ ಹೆಸರನ್ನು ಉದ್ದೇಶಿತ ಪ್ರಾಧಿಕಾರಕ್ಕೆ ಇಡುವ ಮೂಲಕ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾಗಿ ಉಳಿಸುವಲ್ಲಿ ಕ್ರಮವಹಿಸಬೇಕು’ ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.