ADVERTISEMENT

ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಿ: ಹಿಂದುಳಿದ ವರ್ಗಗಳ ಮುಖಂಡರು

​ಪ್ರಜಾವಾಣಿ ವಾರ್ತೆ
Published 23 ಜುಲೈ 2021, 11:52 IST
Last Updated 23 ಜುಲೈ 2021, 11:52 IST
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಹಿಂದುಳಿದ ವರ್ಗಗಳ ಮುಖಂಡರು.
ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಹಿಂದುಳಿದ ವರ್ಗಗಳ ಮುಖಂಡರು.   

ಬೆಂಗಳೂರು:‘ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯಬೇಕು. ಅವರನ್ನು ಬದಲಾವಣೆ ಮಾಡಿದರೆ, ಕುರುಬ ಸಮುದಾಯದ ಬಿಜೆಪಿ ನಾಯಕರಾದ ಕೆ.ಎಸ್ ಈಶ್ವರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಿ’ ಎಂದು ಹಿಂದುಳಿದ ವರ್ಗಗಳ ಮುಖಂಡರು ಬಿಜೆಪಿ ಹೈಕಮಾಂಡ್‍ಗೆ ಮನವಿ ಮಾಡಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಹಿಂದ ಮುಖಂಡ ಕೆ. ಮುಕುಡಪ್ಪ,‘ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲು ನಮ್ಮ ಬೆಂಬಲವಿದೆ. ಅವರನ್ನು ಬದಲಾಯಿಸುವುದಾದರೆ, ಅವರ ಸಮಕಾಲೀನರು ಹಾಗೂ ಹಿಂದುಳಿದ ವರ್ಗಗಳ ಮುಖಂಡರಾದ ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಒತ್ತಾಯಿಸಿದರು.

‘ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಒಕ್ಕಲಿಗ ಸಮುದಾಯದ ಡಿ.ವಿ.ಸದಾನಂದಗೌಡ ಹಾಗೂ ಲಿಂಗಾಯತ ಸಮುದಾಯದ ಜಗದೀಶ್ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಾಗಿತ್ತು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕುರುಬ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿದೆ. ಹಾಗಾಗಿ, ಕುರುಬ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದರು.

ADVERTISEMENT

ಕೋಲಿ ಸಮಾಜದ ಮುಖಂಡ ತಿಪ್ಪಾರೆಡ್ಡಿ, ಸವಿತಾ ಸಮಾಜದ ಎಂ.ಬಿ.ಶಿವಪ್ಪ, ಮಾಲಿ ಸಮಾಜದ ಬಸವರಾಜ ಬಾಳೇಕಾಯಿ, ಯಾದವ ಸಮಾಜದ ಪ್ರಸನ್ನಕುಮಾರ್, ವಿಶ್ವಕರ್ಮ ಸಮುದಾಯದ ವಿಶ್ವನಾಥ್ ವಿಶ್ವಕರ್ಮ, ಈಡಿಗ ಸಮಾಜದ ಬಸವರಾಜ ಓಟೂರು ಸೇರಿದಂತೆ ಹಿಂದುಳಿದ ವರ್ಗಗಳ ಮುಖಂಡರು ಕೆ.ಎಸ್.ಈಶ್ವರಪ್ಪ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.