ಬೆಂಗಳೂರು: ಕಾಮಗಾರಿಗಳ ಮಂಜೂರಾತಿ, ವಿವಿಧ ಹುದ್ದೆಗಳಿಗೆ ನಾಮನಿರ್ದೇಶನ ಸೇರಿದಂತೆ ಪ್ರಮುಖ ನಿರ್ಧಾರಗಳಲ್ಲಿ ವಿಧಾನಸಭಾ ಸದಸ್ಯರ ಜತೆ ತಮಗೂ ಪ್ರಾತಿನಿಧ್ಯ ನೀಡುವಂತೆ ಹಾಗೂ ತಮ್ಮ ಅಭಿಪ್ರಾಯಗಳಿಗೆ ಮನ್ನಣೆ ನೀಡುವಂತೆ ವಿಧಾನ ಪರಿಷತ್ನ ಬಿಜೆಪಿ ಸದಸ್ಯರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಲ್ಲಿ ಆಗ್ರಹಿಸಿದ್ದಾರೆ.
ಆಡಳಿತ ಪಕ್ಷದಲ್ಲಿದ್ದರೂ ತಮ್ಮನ್ನು ಕಡೆಗಣಿಸಲಾಗುತ್ತಿದೆ ಎಂದು ಪರಿಷತ್ನ ಹಲವು ಸದಸ್ಯರು ಶುಕ್ರವಾರ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ಹೊರಹಾಕಿದ್ದರು. ಈ ಕಾರಣದಿಂದ ಭಾನುವಾರ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ವಿಧಾನ ಪರಿಷತ್ನ ಬಿಜೆಪಿ ಸದಸ್ಯರ ಜತೆ ಸಭೆ ನಡೆಸಿದ ಮುಖ್ಯಮಂತ್ರಿ, ವಿವಿಧ ವಿಷಯಗಳ ಕುರಿತು ಸಮಾಲೋಚಿಸಿದರು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಪರಿಷತ್ ಸದಸ್ಯರು ಮುಖ್ಯಮಂತ್ರಿಯವರನ್ನು ಭೇಟಿ ಮಾಡಿದ್ದರು.
ಅನುದಾನ ಹಂಚಿಕೆ, ಕಾಮಗಾರಿಗಳ ಮಂಜೂರಾತಿ ಸೇರಿದಂತೆ ಎಲ್ಲ ಪ್ರಮುಖ ವಿಚಾರಗಳಲ್ಲಿ ವಿಧಾನ ಪರಿಷತ್ ಸದಸ್ಯರಿಗೂ ಮನ್ನಣೆ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸೂಚನೆ ನೀಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಆಯಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ನಿರ್ಣಯಗಳನ್ನು ಕೈಗೊಳ್ಳುವ ಮೊದಲು ವಿಶ್ವಾಸಕ್ಕೆ ತೆಗೆದುಕೊಳ್ಳುವಂತೆಯೂ ಸೂಚಿಸುವುದಾಗಿ ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವಿಧಾನ ಪರಿಷತ್ನ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣಾ ತಯಾರಿಯ ಕುರಿತೂ ಮುಖ್ಯಮಂತ್ರಿಯವರು ಪರಿಷತ್ ಸದಸ್ಯರ ಜತೆ ಚರ್ಚಿಸಿದ್ದಾರೆ. ಗ್ರಾಮ ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾವಣೆ ಕುರಿತೂ ಸದಸ್ಯರು ಕೆಲವು ಸಲಹೆಗಳನ್ನು ನೀಡಿದ್ದಾರೆ ಎಂದು ಮೂಲಗಳು ಹೇಳಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.