ಬೆಂಗಳೂರು: ‘ಅತ್ಯಾಧುನಿಕ ತಂತ್ರಜ್ಞಾನದ ನೆರವಿನಿಂದಾಗಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಗಮನಾರ್ಹವಾದ ಪ್ರಗತಿ ಸಾಧಿಸಿದ್ದೇವೆ. ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಚಿಕಿತ್ಸೆಗೆ ಇಮ್ಯುನೊಥೆರಪಿ ಸಹಕಾರಿಯಾಗಿದೆ’ ಎಂದು ಎಚ್ಸಿಜಿ ಕ್ಯಾನ್ಸರ್ ಆಸ್ಪತ್ರೆಯ ಕಾರ್ಯಕಾರಿ ಅಧ್ಯಕ್ಷ ಡಾ.ಬಿ.ಎಸ್. ಅಜಯ್ ಕುಮಾರ್ ತಿಳಿಸಿದರು.
ಕ್ಯಾನ್ಸರ್ ಕಾಯಿಲೆಯ ಸುಧಾರಿತ ಚಿಕಿತ್ಸೆ, ಪರಿಹಾರದ ಬಗ್ಗೆ ಚರ್ಚೆ ನಡೆಸಲು ದಿ ಗ್ಲೋಬಲ್ ಹೆಲ್ತ್ ಕೇರ್ ಅಕಾಡೆಮಿ ನಗರದಲ್ಲಿ ಹಮ್ಮಿಕೊಂಡಿರುವ ಮೂರು ದಿನಗಳ ‘ಬೆಸ್ಟ್ ಆಫ್ ಎಎಸ್ ಸಿಒ’ ಸಮಾವೇಶದಲ್ಲಿ ಭಾಗವಹಿಸಿ, ಮಾತನಾಡಿದರು.
‘ಬದಲಾದ ಜೀವನಶೈಲಿ, ಪಾಶ್ಚಾತ್ಯ ಆಹಾರ ಪದ್ಧತಿ, ಧೂಮಪಾನದಂತಹ ವ್ಯಸನ, ಒತ್ತಡದ ಜೀವನ, ಕಲುಷಿತ ಪರಿಸರ ಸೇರಿ ವಿವಿಧ ಕಾರಣಗಳಿಂದ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಕ್ಯಾನ್ಸರ್ ವಿಧಗಳನ್ನು ಗಮನಿಸಿದಾಗ ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್ ಹಾಗೂ ಪುರಷರಲ್ಲಿ ಶ್ವಾಸಕೋಶ ಕ್ಯಾನ್ಸರ್ ಪ್ರಕರಣಗಳು ಹೆಚ್ಚಿನ ಸಂಖ್ಯೆಯಲ್ಲಿ ವರದಿಯಾಗುತ್ತಿವೆ. ಆದ್ದರಿಂದ ಚಿಕಿತ್ಸೆಗೆ ಸಂಬಂಧಿಸಿದಂತೆ ವಿವಿಧ ಆವಿಷ್ಕಾರಗಳನ್ನು ಮಾಡಲಾಗುತ್ತಿದೆ. ತಲೆ ಮತ್ತು ಕುತ್ತಿಗೆ ಕ್ಯಾನ್ಸರ್ ಪ್ರಕರಣಗಳಿಗೆ ಸಂಬಂಧಿಸಿದ ಇಮ್ಯುನೊಥೆರಪಿ ಚಿಕಿತ್ಸೆ ಮಹತ್ವದ ಆವಿಷ್ಕಾರವಾಗಿದೆ. ಈ ವಿಧಾನದಡಿ ಎಚ್ಸಿಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ರೋಗಿಗಳು ಚೇತರಿಸಿಕೊಂಡಿದ್ದಾರೆ’ ಎಂದು ಹೇಳಿದರು.
‘ಇಮ್ಯುನೊಥೆರಪಿ ಚಿಕಿತ್ಸೆ ವಿಧಾನದಲ್ಲಿ ವ್ಯಕ್ತಿಯ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಕ್ಯಾನ್ಸರ್ ಕೋಶದ ವಿರುದ್ಧ ರಕ್ಷಣೆ ಒದಗಿಸಲಾಗುತ್ತದೆ’ ಎಂದು ತಿಳಿಸಿದರು.
ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ‘ಕ್ಯಾನ್ಸರ್ ಕಾಯಿಲೆ ಇತ್ತೀಚೆಗೆ ಸಾಮಾನ್ಯವಾಗಿದೆ. ಈ ಕಾಯಿಲೆ ಬಗ್ಗೆ ಜಾಗೃತಿಯೂ ಮೂಡುತ್ತಿದೆ. ತಂತ್ರಜ್ಞಾನದ ನೆರವಿನಿಂದ ನಿಖರ ಚಿಕಿತ್ಸೆಗಳನ್ನು ಒದಗಿಸಿ, ವ್ಯಕ್ತಿಯನ್ನು ಪ್ರಾಣಾಪಾಯದಿಂದ ಪಾರು ಮಾಡಲು ಸಾಧ್ಯವಾಗುತ್ತಿದೆ. ಕೃತಕ ಬುದ್ಧಿಮತ್ತೆಯಂತಹ ತಂತ್ರಜ್ಞಾನಗಳು ನಿಖರ ಚಿಕಿತ್ಸೆಗೆ ಸಹಕಾರಿಯಾಗುತ್ತಿವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.