ಬೆಂಗಳೂರು: ನಗರದ ಬಾಲಗಂಗಾಧರನಾಥ ಸ್ವಾಮೀಜಿ ಮೇಲ್ಸೇತುವೆಯ ಟೌನ್ಹಾಲ್ ಮಾರ್ಗದ ಎಸ್.ಜೆ.ಪಿ ರಸ್ತೆಯ ಜಂಕ್ಷನ್ನಲ್ಲಿ ಶನಿವಾರದಿಂದ (ಆ.7) ವೈಟ್ ಟಾಪಿಂಗ್ ಕಾಮಗಾರಿ ಪ್ರಾರಂಭವಾಗಲಿದೆ ಎಂದು ಬಿಬಿಎಂಪಿ ಹೇಳಿದೆ.
ಪಾಲಿಕೆಯ ವತಿಯಿಂದ ನಗರದ ಎನ್.ಆರ್ ರಸ್ತೆಯನ್ನು ಟೆಂಡರ್ ಶ್ಯೂರ್ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಕಾಮಗಾರಿ ನಡೆಯುವ ವೇಳೆ ಸಂಚಾರ ದಟ್ಟಣೆ ತಡೆಯುವ ನಿಟ್ಟಿನಲ್ಲಿ, ಕೆ.ಆರ್ ಮಾರುಕಟ್ಟೆ ಮೇಲ್ಸೇತುವೆ ರಸ್ತೆಯ ಮೂಲಕ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದಾರೆ.
ನಗರದ ಗೂಡ್ ಶೆಡ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ನಿರ್ವಹಿಸುವ ಸಂಬಂಧ ಗೂಡ್ ಶೆಡ್ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಿ ಎಲ್ಲ ವಾಹನಗಳನ್ನು ಮೇಲ್ಸೇತುವೆಯ ಮೂಲಕ ಮಾರುಕಟ್ಟೆ ಮತ್ತು ಟೌನ್ಹಾಲ್ ಕಡೆಗೆ ಸಂಚಾರ ಬದಲಾವಣೆ ಮಾಡಲಾಗಿತ್ತು. ಆದರೆ, ಎಸ್.ಜೆ.ಪಿ ರಸ್ತೆಯ ಜಂಕ್ಷನ್ ಹತ್ತಿರ ಮಳೆಯಾದರೆ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಅಡ್ಡಮೋರಿಯನ್ನು ನಿರ್ಮಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
15 ದಿನದೊಳಗೆ ಕಾಮಗಾರಿ ಪೂರ್ಣ:
ಕಾಮಗಾರಿಯನ್ನು 15 ದಿನದೊಳಗೆ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಇದು ಪೂರ್ಣಗೊಂಡ ಬಳಿಕ ಗೂಡ್ ಶೆಡ್ ರಸ್ತೆಯಲ್ಲಿ ವೈಟ್ ಟಾಪಿಂಗ್ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತದೆ. ಕಾಮಗಾರಿ ಸಮಯದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರು ಸಹಕರಿಸಬೇಕು ಎಂದು ಬಿಬಿಎಂಪಿ ಹೇಳಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.