
ಎಫ್ಐಆರ್
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ ಕಚೇರಿಯ ಅಧಿಕೃತ ಪತ್ರವನ್ನು ಅನಧಿಕೃತವಾಗಿ ಬಳಸಿಕೊಂಡಿದ್ದ ವಿಜಯನಗರದ ಆರ್.ಪಿ.ಸಿ ಲೇಔಟ್ನ ರೈಲ್ವೆ ಪ್ಯಾರಲಲ್ ರಸ್ತೆಯ ನಿವಾಸಿ, ಆರೋಪಿ ಎಚ್.ಎನ್.ಸುಜಯೇಂದ್ರ ಅವರ ವಿರುದ್ಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರದೀಪ್ ಅವರು ನೀಡಿದ ದೂರು ಆಧರಿಸಿ, ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 336(3), 336(4), 340(2)ರ ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು
ಅಧಿಕೃತ ಲೆಟರ್ಹೆಡ್ ದುರುಪಯೋಗ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಠಾಣೆಗೆ ದೂರು ನೀಡಲಾಗಿತ್ತು. ವೈದ್ಯರೊಬ್ಬರಿಗೆ ವಂಚಿಸಿದ್ದ ಪ್ರಕರಣದಲ್ಲಿ ಸುಜಯೇಂದ್ರ ಅವರ ವಿರುದ್ಧ ವಿಜಯನಗರ ಠಾಣೆಯಲ್ಲಿ ಈ ಹಿಂದೆ ಎಫ್ಐಆರ್ ದಾಖಲಾಗಿ ಆರೋಪಿಯನ್ನು ಬಂಧಿಸಲಾಗಿತ್ತು. ಈ ಪ್ರಕರಣವನ್ನೂ ಅದೇ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಲೆಟರ್ಹೆಡ್ ದುರುಪಯೋಗ ಪ್ರಕರಣದಲ್ಲಿ ಇನ್ನೂ ಆರೋಪಿಯನ್ನು ಬಂಧಿಸಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
‘ರಾಜ್ಯಪಾಲರ ಅಧಿಕೃತ ಪತ್ರವನ್ನು ಅನಧಿಕೃತವಾಗಿ ಬಳಸಿಕೊಂಡು ಆ ಪತ್ರದ ಮೇಲೆ ರಾಜ್ಯಪಾಲರ ಸಹಿಯನ್ನು ನಕಲಿ ಮಾಡಿ, ವೆಲ್ಲೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ವಿಐಟಿ) ಕುಲಪತಿಗೆ ನೀಡಿರುವುದು ಕಂಡುಬಂದಿದೆ. ಅಧಿಕೃತ ಲೆಟರ್ಹೆಡ್ ದುರುಪಯೋಗ ಹಾಗೂ ನಕಲಿ ಸಹಿ ಮಾಡಿರುವುದು ಗಂಭೀರ ಅಪರಾಧವಾಗಿದ್ದು, ರಾಜ್ಯಪಾಲರ ಕಾರ್ಯಾಲಯಕ್ಕೆ ಆಡಳಿತಾತ್ಮಕವಾಗಿ, ಕಾನೂನುಬದ್ಧ ಹಾಗೂ ಪ್ರತಿಷ್ಠೆಗೆ ಹಾನಿ ಉಂಟು ಮಾಡಿರುವ ಆರೋಪಿಯ ವಿರುದ್ಧ ಕ್ರಮ ತೆಗೆದುಕೊಳ್ಳಿ’ ಎಂದು ಪ್ರದೀಪ್ ಅವರು ದೂರಿನಲ್ಲಿ ಕೋರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.