ADVERTISEMENT

ನಿರಾತಂಕವಾಗಿ ಸಿಇಟಿ: ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ

ಸಿದ್ಧತೆ ಪರಿಶೀಲನೆ ನಡೆಸಿದ ಸಚಿವ ಅಶ್ವತ್ಥನಾರಾಯಣ

​ಪ್ರಜಾವಾಣಿ ವಾರ್ತೆ
Published 29 ಜುಲೈ 2020, 20:21 IST
Last Updated 29 ಜುಲೈ 2020, 20:21 IST
ಅಶ್ವತ್ಥನಾರಾಯಣ
ಅಶ್ವತ್ಥನಾರಾಯಣ   

ಬೆಂಗಳೂರು: ‘ಕೋವಿಡ್ ಹಿನ್ನೆಲೆಯಲ್ಲಿಯೂ ನಿರಾತಂಕವಾಗಿ ಸಿಇಟಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ಗೊಂದಲವಿಲ್ಲ’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್‌. ಅಶ್ವತ್ಥನಾರಾಯಣ ತಿಳಿಸಿದರು.

‘ಕೋವಿಡ್ ಸವಾಲಿನ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಾವು ಯಶಸ್ವಿಯಾಗಿ ನಡೆಸಿದ್ದೇವೆ. ದ್ವಿತೀಯ ಪಿಯುಸಿಯ ಒಂದು ವಿಷಯದ ಪರೀಕ್ಷೆಯನ್ನು ಕೂಡ ನಿರಾತಂಕವಾಗಿ ನಡೆಸಿದ್ದೇವೆ. ಸಿಇಟಿಯನ್ನೂ ಯಾವುದೇ ತೊಂದರೆ ಇಲ್ಲದೆ ನಡೆಸಲು ಸರ್ಕಾರಕ್ಕೆ ಸಾಧ್ಯವಿದೆ’ ಎಂದು ವಿವರಿಸಿದರು.

‘ಅರ್ಜಿ ಸಲ್ಲಿಸಿದವರಿಗೆಲ್ಲ ಸಿಇಟಿ ಬರೆಯಲು ಅವಕಾಶ ನೀಡಲಾಗುವುದು. ಕೋವಿಡ್‌ ದೃಢಪಟ್ಟವರಿಗೆ ಪರೀಕ್ಷಾ ಕೇಂದ್ರದಲ್ಲೇ ಊಟದ ವ್ಯವಸ್ಥೆ ಮಾಡಲಾಗುವುದು. ಇತರ ವಿದ್ಯಾರ್ಥಿಗಳಿಗೆ ಬೆಳಿಗ್ಗೆ ಮತ್ತು ಮಧ್ಯಾಹ್ನದ ಪರೀಕ್ಷೆಯ ನಡುವಿನ ವಿರಾಮದ ಅವಧಿಯಲ್ಲಿ ಹೊರಗಡೆ ಹೋಗಲು ಅವಕಾಶವಿದೆ ’ ಎಂದು ಹೇಳಿದರು.

ADVERTISEMENT

‘ಏಪ್ರಿಲ್ 23-24ಕ್ಕೆ ಸಿಇಟಿ ನಿಗದಿಯಾಗಿತ್ತು. ಲಾಕ್‌ಡೌನ್ ಘೋಷಿಸಿದ್ದ ಕಾರಣಕ್ಕೆ ಮುಂದೂಡಲಾಗಿತ್ತು. ಜುಲೈ 30-31ರಂದು ಪರೀಕ್ಷೆ ನಡೆಸಲು ಮೇ 12ರಂದೇ ನಿರ್ಧರಿಸಲಾಗಿತ್ತು. ಆ ಕ್ಷಣದಿಂದಲೇ ಸರ್ಕಾರವೂ ಕೋವಿಡ್ ಮುನ್ನೆಚ್ಚರಿಕೆ ವಹಿಸುವುದರ ಜತೆಗೆ, ವಿದ್ಯಾರ್ಥಿಗಳಿಗೆ ಸಾರಿಗೆ, ವೈದ್ಯಕೀಯ, ರಕ್ಷಣೆ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಮಾಡಲಾಯಿತು’ ಎಂದರು.

ಅವರು ಬುಧವಾರ ಬೆಳಿಗ್ಗೆ ಮಲ್ಲೇಶ್ವರದ ಲಕ್ಷ್ಮೀ ಅಮ್ಮಣ್ಣಿ ಕಾಲೇಜಿನ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿ ಪೂರ್ವಸಿದ್ಧತೆ ವೀಕ್ಷಿಸಿದರು. ಪರೀಕ್ಷಾ ಕೇಂದ್ರದಲ್ಲಿ ಕೈಗೊಂಡಿರುವ ಮುನ್ನೆಚ್ಚರಿಕೆ ಕ್ರಮಗಳನ್ನು ಗಮನಿಸಿದ ಅಶ್ವತ್ಥನಾರಾಯಣ, ವಿದ್ಯಾರ್ಥಿಗಳು ಕುಳಿತುಕೊಳ್ಳುವ ಅಂತರ, ಕೊಠಡಿಗಳ ಸ್ಯಾನಿಟೈಸೇಷನ್, ಮಾಸ್ಕ್ ಧರಿಸುವುದು, ಥರ್ಮಲ್ ಸ್ಕ್ರೀನಿಂಗ್, ಭದ್ರತೆ, ಸಾರಿಗೆ, ಮೂಲಸೌಕರ್ಯ ಮತ್ತಿತರ ಅಂಶಗಳನ್ನು ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.