ಬೆಂಗಳೂರು: ಮರಾಠ ಸಮುದಾಯದವರ ಅಭಿವೃದ್ಧಿಗಾಗಿ ‘ಮರಾಠ ಅಭಿವೃದ್ಧಿ ಪ್ರಾಧಿಕಾರ’ ರಚಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ.
ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಈ ಕಾರಣಕ್ಕಾಗಿ ಪ್ರಾಧಿಕಾರ ರಚನೆಗೆ ಸರ್ಕಾರ ತೀರ್ಮಾನಿಸಿದೆ ಎಂದೂ ಹೇಳಲಾಗಿದೆ.
ಈ ಕುರಿತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಟಿಪ್ಪಣಿ ಕಳುಹಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ‘ರಾಜ್ಯದಲ್ಲಿ ಮರಾಠ ಜನಾಂಗದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಈ ಸಮುದಾಯದ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಹಾಗೂ ಧಾರ್ಮಿಕ ಅಭಿವೃದ್ಧಿಗಾಗಿ ಪ್ರಾಧಿಕಾರ ರಚಿಸಲು ಕ್ರಮ ಕೈಗೊಳ್ಳಿ’ ಎಂದು ಸೂಚಿಸಿದ್ದಾರೆ.
ಸಮುದಾಯವರ ಅಭಿವೃದ್ಧಿಗಾಗಿ ₹50 ಕೋಟಿ ಅನುದಾನ ಮೀಸಲಿಡುವಂತೆ ನಿರ್ದೇಶನ ನೀಡಿದ್ದಾರೆ.
ಚುನಾವಣೆ ಮೇಲೆ ಕಣ್ಣು: ಬೆಳಗಾವಿಯ ಸಂಸದರಾಗಿದ್ದ ಸುರೇಶ ಅಂಗಡಿ ಅಕಾಲಿಕ ನಿಧನದಿಂದಾಗಿ ಈ ಕ್ಷೇತ್ರಕ್ಕೆ ಚುನಾವಣೆ ನಡೆಯಬೇಕಿದೆ. ಸದ್ಯದಲ್ಲೇ ಉಪಚುನಾವಣೆ ಘೋಷಣೆಯಾಗಲಿದ್ದು, ಕ್ಷೇತ್ರದಲ್ಲಿ ಬಿಜೆಪಿ ಪಾಲಿಗೆ ನಿರ್ಣಾಯಕ ಮತಗಳಂತಿರುವ ಮರಾಠಿಗರ ಮತ ಸೆಳೆಯಲು ಪ್ರಾಧಿಕಾರ ರಚನೆಗೆ ಸರ್ಕಾರ ಮುಂದಾಗಿದೆ ಎಂದೂ ಹೇಳಲಾಗಿದೆ.
ಶಿರಾ ಕ್ಷೇತ್ರದ ಉಪಚುನಾವಣೆ ಹೊತ್ತಿನಲ್ಲಿ ಕಾಡುಗೊಲ್ಲರ ಅಭಿವೃದ್ಧಿ ಮಂಡಳಿ ರಚಿಸಲಾಗಿತ್ತು. ಇದರಿಂದಾಗಿ ಬಿಜೆಪಿಗೆ ದೊಡ್ಡ ಮಟ್ಟದ ಲಾಭವೂ ಆಗಿತ್ತು.
ಚುನಾವಣೆ ಘೋಷಣೆಯಾಗುವ ಮುನ್ನವೇ ಮರಾಠಿ ಪ್ರಾಧಿಕಾರ ರಚಿಸಿ, ಆ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವುದು ಇದರ ಹಿಂದಿನ ಲೆಕ್ಕಾಚಾರ ಎನ್ನಲಾಗುತ್ತಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.