ಬೆಂಗಳೂರು: ‘ಕರ್ನಾಟಕ ಲೋಕಾಯುಕ್ತ ಸಂಸ್ಥೆ ಮತ್ತು ಭ್ರಷ್ಟಾಚಾರ ನಿಗ್ರಹ ದಳದ ಕಾರ್ಯವ್ಯಾಪ್ತಿಗಳು ಬೇರೆ ಬೇರೆ ಎಂದು ವ್ಯಾಖ್ಯಾನಿಸುವ ಮೂಲಕ ಎಸಿಪಿ ರದ್ದುಪಡಿಸುವ ಸಾಧ್ಯತೆಯನ್ನು ರಾಜ್ಯ ಸರ್ಕಾರ ಪರೋಕ್ಷವಾಗಿ ತಳ್ಳಿಹಾಕಿದೆ.
ಕರ್ನಾಟಕ ಲೋಕಾಯುಕ್ತ ಕಾಯ್ದೆ 1984ರ ಅನ್ವಯ ಲೋಕಾಯುಕ್ತ ಸಂಸ್ಥೆ ಕಾರ್ಯ ನಿರ್ವಹಿಸುತ್ತಿದೆ. ಸಾರ್ವಜನಿಕ ನೌಕರರ ವಿರುದ್ಧದ ದೂರುಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ತನಿಖಾ ಸಂಸ್ಥೆಗಳ ನೆರವಿನಿಂದ ವಿಚಾರಣೆ ನಡೆಸಲು ಲೋಕಾಯುಕ್ತರಿಗೆ ಅಧಿಕಾರ ನೀಡುತ್ತದೆ. ಆಡಳಿತದ ಗುಣಮಟ್ಟ ಸುಧಾರಿಸಿ, ಜನರಿಗೆ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ಸಂಸ್ಥೆ ಶ್ರಮಿಸುತ್ತಿದೆ.
ಹಾಗೆ, ಭ್ರಷ್ಟಾಚಾರ ನಿಗ್ರಹ ದಳ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 2016ರ ಸರ್ಕಾರದ ಆದೇಶದ ಅನ್ವಯ ಅಸ್ತಿತ್ವಕ್ಕೆ ಬಂದಿದ್ದು, ಭ್ರಷ್ಟಾಚಾರಕ್ಕೆ ಸಂಬಂಧಿಸಿದ ದೂರುಗಳನ್ನು ಸ್ವತಂತ್ರವಾಗಿ ತನಿಖೆ ನಡೆಸುತ್ತಿದೆ.
ಲೋಕಾಯುಕ್ತ ಕಾಯ್ದೆ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅನ್ವಯ ಕೆಲಸ ಮಾಡುವ ಎರಡೂ ಸಂಸ್ಥೆಗಳು ಪ್ರತ್ಯೇಕ ಕಾರ್ಯವ್ಯಾಪ್ತಿ ಹೊಂದಿದ್ದು ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸ್ವತಂತ್ರವಾಗಿ ಕೆಲಸ ಮಾಡುತ್ತಿವೆ ಎಂದು ಸಾಮಾಜಿಕ ಕಾರ್ಯಕರ್ತ ವೆಂಕಟೇಶ್ ಅವರಿಗೆ ಬರೆದಿರುವ ಪತ್ರದಲ್ಲಿ ಸರ್ಕಾರ ಸ್ಪಷ್ಟಪಡಿಸಿದೆ.
ಭರವಸೆ ಈಡೇರಿಸಿಲ್ಲ: ಬಿಜೆಪಿ ಅಧಿಕಾರಕ್ಕೆ ಬಂದರೆ ಎಸಿಬಿ ರದ್ದುಪಡಿಸಿ. ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸಿದೆ ಎಂದು ಹೇಳಲಾಗಿತ್ತು. ಆದರೆ, ಈಗ ಭರವಸೆಯಿಂದ ಹಿಂದೆ ಸರಿಯುವ ಮೂಲಕ ಕೊಟ್ಟ ಮಾತಿಗೆ ತಪ್ಪುತ್ತಿದೆ ಎಂದು ವೆಂಕಟೇಶ್ ಟೀಕಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.