ADVERTISEMENT

ಗೌರಿ ಲಂಕೇಶ್‌ ಹತ್ಯೆ ಪ್ರಕರಣ: ಆರೋಪಿಗೆ ಜಾಮೀನು

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 15:49 IST
Last Updated 10 ಜನವರಿ 2025, 15:49 IST
<div class="paragraphs"><p>ಜಾಮೀನು</p></div>

ಜಾಮೀನು

   

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಮತ್ತೊಬ್ಬ ಆರೋ‍ಪಿ ಶರದ್ ಬಾಹು ಸಾಹೇಬ್ ಕಲಾಸ್ಕರ್‌ಗೆ ಪ್ರಧಾನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಇದರೊಂದಿಗೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿದ್ದ ಎಲ್ಲ ಆರೋಪಿಗಳಿಗೂ ಜಾಮೀನು ಸಿಕ್ಕಂತಾಗಿದೆ.

ಆರೋಪಿ ಕಲಾಸ್ಕರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಮುರುಳೀಧರ್ ಪೈ ಜಾಮೀನು ಮಂಜೂರು ಮಾಡಿದರು.

ADVERTISEMENT

‘ಜಾಮೀನು ಮಂಜೂರು ಮಾಡಿದರೆ ಆರೋ‍ಪಿ ಇದೇ ರೀತಿಯ ಕೃತ್ಯಗಳಲ್ಲಿ ಭಾಗಿಯಾಗುವ ಸಾಧ್ಯತೆಯಿದೆ. ಅಲ್ಲದೇ ಸಾಕ್ಷಿಗಳಿಗೆ ಬೆದರಿಕೆ ಹಾಕುವ ಸಾಧ್ಯತೆಯಿದೆ. ಜಾಮೀನು ನೀಡಬಾರದು. ಜಾಮೀನು ಅರ್ಜಿಯನ್ನು ವಜಾ ಮಾಡಬೇಕು’ ಎಂದು ಪ್ರಾಸಿಕ್ಯೂಷನ್ ಪರ ವಕೀಲರು ಕೋರಿದರು.

‘ಆರೋಪಿಗಳ ವಿರುದ್ಧ ವಿಚಾರಣೆ ಬಾಕಿಯಿರುವ ಸಂದರ್ಭದಲ್ಲಿ ಅವರ ವೈಯಕ್ತಿಕ ಹಕ್ಕು ಕಸಿದುಕೊಳ್ಳಲು ಆಗುವುದಿಲ್ಲ. ಅನಗತ್ಯ ವಿಳಂಬವು ಬದುಕುವ ಹಕ್ಕನ್ನು ಮೊಟಕುಗೊಳಿಸಿದಂತೆ ಆಗುತ್ತದೆ ಎಂದು ಇತ್ತೀಚೆಗೆ ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಅರ್ಜಿದಾರರು 2018ರ ಸೆಪ್ಟೆಂಬರ್​ 4ರಿಂದ ಬಂಧನದಲ್ಲಿದ್ದು, ಜಾಮೀನು ಮಂಜೂರು ಮಾಡಬಹುದಾಗಿದೆ’ ಎಂದು ನ್ಯಾಯಾಧೀಶರು ಹೇಳಿದರು.

₹2 ಲಕ್ಷ ಮೊತ್ತದ ಬಾಂಡ್ ಮತ್ತು ಎರಡು ಶ್ಯೂರಿಟಿಗಳನ್ನು ನೀಡಬೇಕು ಎಂಬ ಷರತ್ತಿನೊಂದಿಗೆ ನ್ಯಾಯಾಧೀಶರು ಜಾಮೀನು ಮಂಜೂರು ಮಾಡಿದರು.

ಹತ್ಯೆ ಪ್ರಕರಣದಲ್ಲಿ ಆರೋಪಿಗಳ ವಿರುದ್ಧ ಐಪಿಸಿ 302(ಕೊಲೆ), 120ಬಿ(ಕ್ರಿಮಿನಲ್ ಪಿತೂರಿಗೆ ಶಿಕ್ಷೆ), 118 (ಜೀವಾವಧಿ ಶಿಕ್ಷೆ ಆಗುವಂತಹ ಕೃತ್ಯಕ್ಕೆ ಸಹಕಾರ), 304 (ಕೊಲೆ ಆರೋಪಕ್ಕೆ ಶಿಕ್ಷೆ), ಭಾರತೀಯ ಶಸ್ತ್ರಾಸ್ತ್ರ ಕಾಯ್ದೆ, ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣಾ ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.