
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯಲ್ಲಿ ಕಸ ಸಂಗ್ರಹಿಸುವ ಲೋಡರ್ಸ್, ವಾಹನ ಚಾಲಕರು, ಸಹಾಯಕರ ಸೇವೆಯನ್ನು ಕಾಯಂಗೊಳಿಸುವಂತೆ ಆಗ್ರಹಿಸಿ, ಮಾರ್ಚ್ 4ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ನವ ಕರ್ನಾಟಕ ನಿರ್ಮಾಣ ಆಂದೋಲನ ತಿಳಿಸಿದೆ.
ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಂದೋಲನ ಮುಖಂಡರಾದ ಕೋಡಿಹಳ್ಳಿ ಚಂದ್ರಶೇಖರ್, ಮಾರಸಂದ್ರ ಮುನಿಯಪ್ಪ, ಆರ್. ಮೋಹನರಾಜ್, ‘ಜಿಬಿಎ ವ್ಯಾಪ್ತಿಯಲ್ಲಿ ಕಸ ಸಾಗಾಣಿಕೆ, ಕಸ ಸಂಗ್ರಹಿಸುವ ಲೋಡರ್ಸ್, ಕ್ಲೀನರ್ಸ್, ಕಸದ ವಾಹನ ಚಲಾಯಿಸುವ ಚಾಲಕರು ಗುತ್ತಿಗೆ ಪದ್ಧತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರೆಲ್ಲರ ಸೇವೆಯನ್ನೂ ಕಾಯಂಗೊಳಿಸಬೇಕು. ಗುತ್ತಿಗೆದಾರರು ಇವರನ್ನು ಜೀತ ಪದ್ಧತಿಯಲ್ಲಿ ದುಡಿಸಿಕೊಳ್ಳುತ್ತಿರುವುದು ಖಂಡನೀಯ’ ಎಂದು ತಿಳಿಸಿದರು.
‘ಈ ಸ್ವಚ್ಛತಾ ಸಿಬ್ಬಂದಿಗೆ ಮಾಸ್ಕ್, ಗ್ಲೌಸ್, ಬೂಟ್ ಸೇರಿದಂತೆ ಯಾವುದೇ ರೀತಿಯ ಸೌಲಭ್ಯಗಳನ್ನು ನೀಡುತ್ತಿಲ್ಲ. ಇದರ ಜೊತೆಗೆ ಇಎಸ್ಐ ಸೌಲಭ್ಯವಿಲ್ಲ, ಕನಿಷ್ಠ ವೇತನವನ್ನು ನೀಡುತ್ತಿಲ್ಲ. ರಾಜ್ಯ ಸರ್ಕಾರ ಕೂಡಲೇ ಇವರನ್ನು ಕಾಯಂಗೊಳಿಸಿ, ಆಧುನಿಕ ಜೀತಪದ್ಧತಿಯಿಂದ ಮುಕ್ತಗೊಳಿಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.