ADVERTISEMENT

ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆ: ಇವಿಎಂ ಬದಲು ಮತಪತ್ರ

ಜಿಬಿಎ ವ್ಯಾಪ್ತಿಯ ಮತದಾರರ ಕರಡು ಪಟ್ಟಿ ಪ್ರಕಟಿಸಿದ ರಾಜ್ಯ ಚುನಾವಣಾ ಆಯೋಗ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 0:30 IST
Last Updated 20 ಜನವರಿ 2026, 0:30 IST
<div class="paragraphs"><p>ಜಿಬಿಎ</p></div>

ಜಿಬಿಎ

   

ಬೆಂಗಳೂರು: ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಯಲ್ಲಿ ಮತದಾನಕ್ಕೆ ವಿದ್ಯುನ್ಮಾನ ಮತ ಯಂತ್ರದ (ಇವಿಎಂ) ಬದಲು ಮತಪತ್ರ (ಬ್ಯಾಲೆಟ್‌ ಪೇಪರ್) ಬಳಸಲು ರಾಜ್ಯ ಚುನಾವಣಾ ಆಯೋಗ ನಿರ್ಧರಿಸಿದೆ.

ಜಿಬಿಎಯ ಐದು ನಗರ ಪಾಲಿಕೆ ಸೇರಿದಂತೆ, ರಾಜ್ಯದ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತಪತ್ರ ಬಳಕೆ ಹಾಗೂ ರಾಜ್ಯ ಚುನಾವಣಾ ಆಯೋಗದ ನೇತೃತ್ವದಲ್ಲಿ ಪ್ರತ್ಯೇಕ ಮತದಾರರ ಪಟ್ಟಿ ಸಿದ್ಧಪಡಿಸಲು 2025ರ ಸೆಪ್ಟೆಂಬರ್‌ 4ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ನಿರ್ಣಯ ಕೈಗೊಂಡಿತ್ತು.

ADVERTISEMENT

ಮತದಾರರ ಕರಡು ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿ ಮಾತನಾಡಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎಸ್ ಸಂಗ್ರೇಶಿ ಅವರು, ‘ಗ್ರೇಟರ್‌ ಬೆಂಗಳೂರು ಆಡಳಿತ ಕಾಯ್ದೆಯಲ್ಲಿ (ಜಿಬಿಜಿಎ) ಇರುವ ನಿಯಮಗಳಂತೆ ಇವಿಎಂ ಅಥವಾ ಮತಪತ್ರದಲ್ಲಿ ಚುನಾವಣೆ ನಡೆಸಬಹುದಾಗಿದೆ. ಆ ಅಧಿಕಾರವನ್ನು ಬಳಸಿ ಮತಪತ್ರದಲ್ಲಿ ಐದೂ ನಗರ ಪಾಲಿಕೆಗಳ ಚುನಾವಣೆಯನ್ನು ಜೂನ್‌ 30ರೊಳಗೆ ನಡೆಸಲಾಗುವುದು’ ಎಂದು ತಿಳಿಸಿದರು.

‘ರಾಜ್ಯ ಚುನಾವಣಾ ಆಯೋಗ ಸ್ವಾಯತ್ತ ಸಂಸ್ಥೆಯಾಗಿದ್ದು, ಯಾರ ಅಧೀನಕ್ಕೂ ಬರುವುದಿಲ್ಲ. ಕಾಯ್ದೆಯಲ್ಲಿರುವಂತೆ ಮತಪತ್ರ ಬಳಸಲಾಗುತ್ತದೆ. ಸರ್ಕಾರದ ಯಾವ ಸೂಚನೆಯೂ ಇಲ್ಲ. ಇದು ಸಂಪೂರ್ಣವಾಗಿ ಚುನಾವಣಾ ಆಯೋಗದ ನಿರ್ಧಾರ’ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

‘ಸುಪ್ರೀಂ ಕೋರ್ಟ್‌ನ ಯಾವುದೇ ತೀರ್ಪಿನಲ್ಲಾಗಲಿ ಅಥವಾ ದೇಶದ ಯಾವುದೇ ಕಾನೂನಿನಲ್ಲಾಗಲಿ ಮತಪತ್ರ ಬಳಕೆಯನ್ನು ನಿಷೇಧಿಸಲಾಗಿದೆ ಎಂಬ ಪ್ರಸ್ತಾಪವಿಲ್ಲ. ನಿಯಮಗಳ ಚೌಕಟ್ಟಿನಲ್ಲೇ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವಿಶ್ವದ ಅನೇಕ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಲ್ಲಿ ಇಂದಿಗೂ ಮತಪತ್ರದ ಮೂಲಕವೇ ಪಾರದರ್ಶಕವಾಗಿ ಚುನಾವಣೆ ನಡೆಸಲಾಗುತ್ತಿದೆ. ಹೀಗಿರುವಾಗ ನಾವು ಮತಪತ್ರ ಬಳಸಿದರೆ ಅದು ಹಿನ್ನಡೆ ಎಂದು ಭಾವಿಸುವುದು ಸರಿಯಲ್ಲ’ ಎಂದು ಅವರು ‍ಪ್ರತಿಪಾದಿಸಿದರು.

‘ಆಧುನಿಕ ತಂತ್ರಜ್ಞಾನಕ್ಕಿಂತಲೂ ನಂಬಿಕೆ ಮತ್ತು ಕಾನೂನಿನ ಅನುಷ್ಠಾನ ಮುಖ್ಯವಾಗಿರುತ್ತದೆ. ಚುನಾವಣಾ ಆಯೋಗವು ಯಾವುದೇ ನಿರ್ದಿಷ್ಟ ರಾಜಕೀಯ ಪಕ್ಷದ ಪರವಾಗಿ ಅಥವಾ ಯಾರದ್ದೋ ಹೆದರಿಕೆಗೆ ಮಣಿದು ಈ ತೀರ್ಮಾನ ಕೈಗೊಂಡಿಲ್ಲ. ರಾಜ್ಯ ಚುನಾವಣಾ ಆಯೋಗವು ಒಂದು ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯಾಗಿದ್ದು, ಅದಕ್ಕೆ ತನ್ನದೇ ಆದ ಅಧಿಕಾರವಿದೆ. ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳನ್ನು ಭಾರತೀಯ ಚುನಾವಣಾ ಆಯೋಗ ನಡೆಸುತ್ತದೆ. ಆದರೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜವಾಬ್ದಾರಿ ನಮ್ಮದಾಗಿದ್ದು, ಇಲ್ಲಿ ಮತಪತ್ರ ಬಳಸುವ ಅಧಿಕಾರ ಆಯೋಗಕ್ಕಿದೆ’ ಎಂದು ಹೇಳಿದರು.

‘ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಲ್ಲೂ ಮತಪತ್ರ ಬಳಸಲಾಗುತ್ತದೆ. ಇವಿಎಂ ಕೊರತೆ ಅಥವಾ ತಾಂತ್ರಿಕ ಮಿತಿಗಳ ನಡುವೆ, ಮತಪತ್ರದ ಮೂಲಕ ಸುಗಮ ಮತ್ತು ವಿಶ್ವಾಸಾರ್ಹ ಚುನಾವಣೆ ನಡೆಸುವುದು ಆಯೋಗದ ಪ್ರಮುಖ ಗುರಿಯಾಗಿದೆ. ಇದಕ್ಕಾಗಿ ಅಗತ್ಯ ಸಿಬ್ಬಂದಿಯನ್ನೂ ನೇಮಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.