
ಬೆಂಗಳೂರು: ‘ಗೃಹಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಪ್ರತಿ ತಿಂಗಳು ನಿಯಮಿತವಾಗಿ ಹಣ ಪಾವತಿಯಾಗದ ಕಾರಣ, ಯೋಜನೆ ಪ್ರಾರಂಭದಿಂದ ಈವರೆಗೆ ಬಳಕೆಯಾದ ಅನುದಾನಕ್ಕೆ ಸಂಬಂಧಿಸಿದಂತೆ ಲೆಕ್ಕ ಪರಿಶೋಧನೆ ನಡೆಸಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಆಗ್ರಹಿಸಿದ್ದಾರೆ.
ಈ ಬಗ್ಗೆ ಅವರು ಅಕೌಂಟೆಂಟ್ ಜನರಲ್ ಅವರಿಗೆ ಪತ್ರ ಬರೆದಿದ್ದಾರೆ. ‘ರಾಜ್ಯದಲ್ಲಿ ಜಾರಿಯಲ್ಲಿರುವ ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ ₹ 2 ಸಾವಿರ ನೀಡಲಾಗುತ್ತಿದೆ. ಈ ಯೋಜನೆಗೆ ಸರ್ಕಾರದ ಬೊಕ್ಕಸದಿಂದ ಮಾಸಿಕ ಸುಮಾರು 2,600 ಕೋಟಿ ವೆಚ್ಚವಾಗುತ್ತಿದೆ. ಆದರೆ, ಫಲಾನುಭವಿಗಳ ಬ್ಯಾಂಕ್ ಖಾತೆಗೆ ನಿಯಮಿತವಾಗಿ ಹಣ ಜಮೆ ಮಾಡುತ್ತಿಲ್ಲ. ಈ ಬಗ್ಗೆ ಸದನದಲ್ಲಿ ವಿರೋಧ ಪಕ್ಷಗಳಿಗೆ ಉತ್ತರಿಸುವಾಗ, ಪ್ರತಿ ತಿಂಗಳು ಹಣ ಪಾವತಿಸಿರುವುದಾಗಿ ಸುಮಾರು ₹ 5 ಸಾವಿರ ಕೋಟಿಯ ತಪ್ಪು ಲೆಕ್ಕವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರಾದ ಲಕ್ಷ್ಮಿ ಹೆಬ್ಬಾಳಕರ ತೋರಿಸಿದ್ದಾರೆ. ಆದ್ದರಿಂದ ಲೆಕ್ಕ ಪರಿಶೋಧನೆ ನಡೆಸಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.