ADVERTISEMENT

ಬೆಂಗಳೂರು: ಕಸ ವಿಲೇವಾರಿಗೆ ಮಾರ್ಗಸೂಚಿ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2024, 22:40 IST
Last Updated 10 ಅಕ್ಟೋಬರ್ 2024, 22:40 IST
ತುಷಾರ್‌ ಗಿರಿನಾಥ್‌
ತುಷಾರ್‌ ಗಿರಿನಾಥ್‌   

ಬೆಂಗಳೂರು: ದಸರಾ ಹಾಗೂ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಉತ್ಪತ್ತಿಯಾಗುವ ಹೆಚ್ಚುವರಿ ಘನತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಲು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಮಾರ್ಗಸೂಚಿ ಹೊರಡಿಸಿದ್ದಾರೆ.

ಬಾಳೇಕಂದು, ಮಾವಿನ ಎಲೆ, ಹೂವು ಹಾಗೂ ಇತರೆ ಹಬ್ಬದ ವಸ್ತುಗಳನ್ನು ಮಾರಾಟ ಮಾಡುವ ವ್ಯಾಪಾರಿಗಳಿಗೆ ವಿಶೇಷವಾಗಿ ಮಾರುಕಟ್ಟೆಗಳಲ್ಲಿ ಹಸಿ ಮತ್ತು ಒಣ ತ್ಯಾಜ್ಯವನ್ನು ವಿಂಗಡಿಸಿ ನೀಡಲು ಅರಿವು ಮೂಡಿಸಬೇಕು.

ಮಾರುಕಟ್ಟೆಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಬ್ಬದ ಸಾಮಗ್ರಿಗಳ ವ್ಯಾಪಾರಿಗಳು ಏಕ ಬಳಕೆ ಪ್ಲಾಸ್ಟಿಕ್‌ಗಳನ್ನು ಬಳಸದಂತೆ ವಾರ್ಡ್‌ಗಳಲ್ಲಿ ಘನತ್ಯಾಜ್ಯ ಆರೋಗ್ಯ ಅಧಿಕಾರಿಗಳು ಮತ್ತು ಮಾರ್ಷಲ್‌ಗಳು ತಂಡಗಳು ನಿಗಾವಹಿಸಬೇಕು. ತಂಡ ರಚಿಸಿಕೊಂಡು ಪ್ರತಿದಿನ ಪರಿವೀಕ್ಷಣೆ ಕೈಗೊಂಡು ಪ್ಲಾಸ್ಟಿಕ್ ಮಾರಾಟ/ ಬಳಕೆದಾರರಿಗೆ ನಿಯಮಾನುಸಾರ ದಂಡ ವಿಧಿಸಿ ಪ್ಲಾಸ್ಟಿಕ್‌ ವಶಪಡಿಸಿಕೊಂಡು ಮರುಬಳಕೆಯಾಗದಂತೆ ಅಗತ್ಯ ಕ್ರಮವಹಿಸಬೇಕು.

ADVERTISEMENT

ದಸರಾ ಹಾಗೂ ದೀಪಾವಳಿ ಹಬ್ಬದ ಪ್ರಯುಕ್ತ ಉತ್ಪತ್ತಿಯಾಗುವ ಹೆಚ್ಚುವರಿ ತ್ಯಾಜ್ಯವನ್ನು ಅಂದಾಜಿಸಿ, ತ್ಯಾಜ್ಯವನ್ನು ಸಂಪೂರ್ಣವಾಗಿ ಸಂಗ್ರಹಿಸಿ, ವಿಲೇವಾರಿ ಮಾಡಲು ಅಗತ್ಯ ಕ್ರಮ ವಹಿಸಬೇಕು.

ಬ್ಲ್ಯಾಕ್‌ಸ್ಪಾಟ್‌ಗಳಲ್ಲಿ (ಕಸ ಸುರಿಯುವ ಸ್ಥಳ) ತ್ಯಾಜ್ಯ ಶೇಖರಣೆಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ವಿಶೇಷ ಗಮನ ಹರಿಸುವುದು. ಮಾರುಕಟ್ಟೆಗಳು ಮತ್ತು ಇತರೆ ಸಾರ್ವಜನಿಕ ಸ್ಥಳಗಳಲ್ಲಿ ನಿರ್ಮಾಣವಾಗುವ ಬ್ಲ್ಯಾಕ್‌ಸ್ಪಾಟ್‌ಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಲು ಕ್ರಮವಹಿಸಬೇಕು.

ಹಬ್ಬದ ಪ್ರಯುಕ್ತ ಮಾರುಕಟ್ಟೆಗಳು ಹಾಗೂ ಇತರೆ ಪ್ರದೇಶಗಳಲ್ಲಿ ಬಾಳೇಕಂದು, ಮಾವಿನ ಎಲೆ, ಹೂವು ಮತ್ತು ಇತರೆ ಹಸಿ ತ್ಯಾಜ್ಯವನ್ನು ಆದ್ಯತೆ ಮೇರೆಗೆ ವಾರ್ಡ್‌ಗಳಲ್ಲಿಯೇ ಹಸಿ / ತೋಟಗಾರಿಕೆ ತ್ಯಾಜ್ಯ ಸಂಸ್ಕರಣಾ ಸೌಲಭ್ಯಗಳನ್ನು ಕಲ್ಪಿಸಿಕೊಂಡು ವಿಲೇವಾರಿ ಮಾಡುವುದು. ವಾರ್ಡ್‌ಗಳಲ್ಲಿ ವಿಕೇಂದ್ರೀಕೃತ ಹಸಿ ತ್ಯಾಜ್ಯ ಸಂಸ್ಕರಣಾ ಘಟಕಗಳಿದ್ದಲ್ಲಿ ಅಲ್ಲಿಗೆ ವಿಲೇವಾರಿ ಮಾಡುವುದು.

ಈ ನಿರ್ದೇಶನಗಳನ್ನು ಕಟ್ಟುನಿಟಾಗಿ ಪಾಲಿಸಿ ದಸರಾ ಹಾಗೂ ದೀಪಾವಳಿ ಹಬ್ಬದ ದಿನಗಳಂದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.