ADVERTISEMENT

ಗುರು ರಾಘವೇಂದ್ರ, ವಸಿಷ್ಠ ಬ್ಯಾಂಕ್‌ ಹಗರಣ ಸಿಬಿಐಗೆ: ಎಸ್‌.ಟಿ. ಸೋಮಶೇಖರ್‌

​ಪ್ರಜಾವಾಣಿ ವಾರ್ತೆ
Published 17 ಜನವರಿ 2023, 21:07 IST
Last Updated 17 ಜನವರಿ 2023, 21:07 IST
   

ಬೆಂಗಳೂರು: ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದರು

ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅಕ್ರಮಗಳ ತನಿಖೆ, ಸಾಲ ವಸೂಲಾತಿ, ಪುನಶ್ಚೇತನ ಕುರಿತು ಸ್ಥಳೀಯ ಶಾಸಕರು, ವಿಧಾನ ಪರಿಷತ್‌ ಸದಸ್ಯರ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ‘ಈ ಎರಡೂ ಸಹಕಾರಿ ಬ್ಯಾಂಕ್‌ಗಳಲ್ಲಿನ ಅಕ್ರಮದ ಕುರಿತು ತನಿಖೆ ಆರಂಭವಾಗಿ ಮೂರು ವರ್ಷಗಳಾದರೂ ಸಾಲ ವಸೂಲಾತಿ ಆಗುತ್ತಿಲ್ಲ. ಈ ಕಾರಣದಿಂದ ತನಿಖೆಯನ್ನು ಸಿಬಿಐಗೆ ವಹಿಸಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು’ ಎಂದರು.

ಠೇವಣಿದಾರರ ಹಿತ ಕಾಪಾಡುವುದು ಸರ್ಕಾರದ ಆದ್ಯತೆ. ಸಾಲ ವಸೂಲಾತಿ ಸಮರ್ಪಕ ನಡೆಯದೇ ಇರುವುದರಿಂದ ಠೇವಣಿದಾರರಿಗೆ ಹಣ ಹಿಂದಿರುಗಿಸಲು ಸಾಧ್ಯವಾಗುತ್ತಿಲ್ಲ. ಇದರಿಂದ ಅವರು ಸರ್ಕಾರವನ್ನು ದೂರುವಂತಾಗಿದೆ. ಈ ಎರಡೂ ಬ್ಯಾಂಕ್‌ಗಳು ಸೇರಿದಂತೆ ಇತರೆ ಯಾವುದೇ ಸಹಕಾರಿ ಸಂಸ್ಥೆಗಳಲ್ಲಿ ಈ ರೀತಿಯ ಅಕ್ರಮ ನಡೆದಿದ್ದರೂ, ಸಿಬಿಐ ತನಿಖೆಗೆ ಒಪ್ಪಿಸಲಾಗುವುದು ಎಂದು ತಿಳಿಸಿದರು.

ADVERTISEMENT

ಈ ಎರಡೂ ಬ್ಯಾಂಕ್‌ಗಳಿಗೆ ಸಂಬಂಧಿಸಿದ ಪ್ರಕರಣಗಳ ತನಿಖೆ ಹಾಗೂ ಸಾಲ ವಸೂಲಾತಿಯಲ್ಲಿನ ಪ್ರಗತಿ ಕುರಿತು ಅಧಿಕಾರಿಗಳು ಸಭೆಗೆ ವಿವರ ನೀಡಿದರು. ‘ಸಿಬಿಐ ತನಿಖೆಗೆ ವಹಿಸಿದರೆ ಏನು ಸಮಸ್ಯೆ’ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ ಸಚಿವರು, ಈ ಸಂಬಂಧ ಸಂಪುಟ ಸಭೆಗೆ ಮಂಡಿಸಲು ಟಿಪ್ಪಣಿ ಸಿದ್ಧಪಡಿಸುವಂತೆ ಸೂಚಿಸಿದರು.

ಸಭೆಯಲ್ಲಿದ್ದ ಶಾಸಕರಾದ ರವಿ ಸುಬ್ರಮಣ್ಯ, ಸೌಮ್ಯಾ ರೆಡ್ಡಿ ಮತ್ತು ವಿಧಾನ ಪರಿಷತ್‌ ಸದಸ್ಯ ಯು.ಬಿ. ವೆಂಕಟೇಶ್‌ ಅವರು ಸಚಿವರ ತೀರ್ಮಾನ ಬೆಂಬಲಿಸಿದರು.

**

ಸಿಬಿಐ ತನಿಖೆಗೆ ವಹಿಸಬೇಕೆಂಬ ನಮ್ಮ ನಿರಂತರ ಹೋರಾಟಕ್ಕೆ ಜಯ ಸಿಕ್ಕಿದೆ. ಕಾಲಮಿತಿಯೊಳಗೆ ತನಿಖೆ ಮುಗಿಯಬೇಕು. ಠೇವಣಿದಾರರಿಗೆ ಹಣ ಹಿಂದಿರುಗಿಸುವ ವಿಷಯವೂ ಇತ್ಯರ್ಥವಾಗಬೇಕು.
– ಡಾ. ಶಂಕರ್‌ ಗುಹಾ ದ್ವಾರಕನಾಥ್‌ ಬಿ, ಶ್ರೀ ಗುರು ರಾಘವೇಂದ್ರ ಹಿತರಕ್ಷಣಾ ವೇದಿಕೆಯ ಮಹಾಪೋಷಕ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.