ಬೆಂಗಳೂರು: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ- ಆಪರೇಟಿವ್ ಲಿಮಿಟೆಡ್ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ‘ಬ್ಯಾಂಕ್ ಅಧ್ಯಕ್ಷ ಹಾಗೂ ಇತರ ಆರೋಪಿಗಳ ₹ 1,000 ಕೋಟಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಬಹುದು’ ಎಂದು ಸಕ್ಷಮ ಪ್ರಾಧಿಕಾರಕ್ಕೆ ಶಿಫಾರಸು ಮಾಡಿದೆ.
ಸಿಐಡಿ ಅಧಿಕಾರಿಗಳು ಪ್ರಕರಣದ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದರು. ತನಿಖೆ ಅಂತಿಮ ಹಂತ ತಲುಪಿದೆ. ಅದರ ನಡುವೆಯೇ ಸಕ್ಷಮ ಪ್ರಾಧಿಕಾರದ ಸೂಚನೆಯಂತೆ, ಪ್ರಕರಣದ ವರದಿಯೊಂದನ್ನು ಸಿಐಡಿ ಅಧಿಕಾರಿಗಳು ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಬ್ಯಾಂಕ್ ಅಧ್ಯಕ್ಷ ಕೆ. ರಾಮಕೃಷ್ಣ, ಅವರ ಪುತ್ರರಾದ ಉಪಾಧ್ಯಕ್ಷ ಕೆ.ಆರ್.ವೇಣುಗೋಪಾಲ್ ಸೇರಿದಂತೆ ನಿರ್ದೇಶಕರನ್ನು ಪ್ರಕರಣದಡಿ ಬಂಧಿಸಲಾಗಿದೆ. ಬೆಂಗಳೂರು, ಚಿಕ್ಕಮಗಳೂರು ಹಾಗೂ ಹಲವು ಕಡೆ ಆರೋಪಿಗಳು ಆಸ್ತಿಯನ್ನು ಹೊಂದಿದ್ದಾರೆ. ಆಸ್ತಿಗಳ ಪಟ್ಟಿಯನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಆಸ್ತಿಯ ಮಾರುಕಟ್ಟೆ ಮೌಲ್ಯವನ್ನೂ ತಿಳಿಸಲಾಗಿದೆ’ ಎಂದು ಮೂಲಗಳು ಹೇಳಿವೆ.
‘ಪ್ರಕರಣದಲ್ಲಿ ₹ 14 ಸಾವಿರ ಕೋಟಿಗೂ ಹೆಚ್ಚು ಅಕ್ರಮ ನಡೆದಿರುವುದು ಇದುವರೆಗಿನ ತನಿಖೆಯಿಂದ ಗೊತ್ತಾಗಿದೆ. ಆರೋಪಿಗಳು ಹಾಗೂ ಅವರ ಸಂಬಂಧಿಕರೇ, ಬ್ಯಾಂಕ್ನಿಂದ ಸಾಲ ಪಡೆದು ಮರುಪಾವತಿ ಮಾಡದೇ ವಂಚಿಸಿರುವುದು ಬಯಲಾಗಿದೆ. ಅಧ್ಯಕ್ಷ ರಾಮಕೃಷ್ಣ ಅವರೇ ತಮ್ಮ ಹಾಗೂ ಇತರರ ಹೆಸರಿನಲ್ಲಿ ₹ 50 ಕೋಟಿಯಷ್ಟು ಸಾಲ ಪಡೆದಿರುವುದಕ್ಕೆ ದಾಖಲೆಗಳು ಸಿಕ್ಕಿವೆ’ ಎಂದೂ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.