ಬೆಂಗಳೂರು: ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ಕೆಲಸ ಮಾಡಿದ್ದಾರೆ. ಆದರೆ, ಮನುವಾದಿ ಮತ್ತು ಜಾತಿವಾದಿಗಳ ಅಪಪ್ರಚಾರದಿಂದಾಗಿ ನಾವು ಕಳೆದ ಚುನಾವಣೆಯಲ್ಲಿ ಸೋಲಬೇಕಾಯಿತು’ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಚ್.ಸಿ.ಮಹದೇವಪ್ಪ ಹೇಳಿದರು.
ನಗರದಲ್ಲಿ ಭಾನುವಾರ ದಲಿತ ಸಂಘರ್ಷ ಸಮಿತಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ಆಯೋಜಿಸಿದ್ದ ಕೋಮುವಾದಿ- ಜಾತಿವಾದಿ- ಫ್ಯಾಸಿಸ್ಟ್ ಶಕ್ತಿಗಳ ಹುನ್ನಾರ ಹಿಮ್ಮೆಟ್ಟಿ
ಸುವ ಕುರಿತ ರಾಜ್ಯ ಮಟ್ಟದ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
‘ಅಭಿವೃದ್ಧಿ ವಿರೋಧಿಗಳಾದ ಜಾತೀಯತೆ ಹಾಗೂ ಫ್ಯಾಸಿಸ್ಟ್ ಶಕ್ತಿಗಳ ವಿರುದ್ಧ ವರ್ಗ ಸಂಘರ್ಷ ರೂಪುಗೊಳ್ಳದಿದ್ದರೆ ಎಲ್ಲರೂ ಬೀದಿ ಪಾಲಾಗಬೇಕಾಗುತ್ತದೆ.ತಳ ಸಮುದಾಯಗಳ ಅಭಿವೃದ್ಧಿಗೆ ಇವು ಅಡಚಣೆ ಉಂಟುಮಾಡುತ್ತಿವೆ. ಸಂವಿಧಾನಬದ್ಧವಾಗಿ ಸಿಗಬೇಕಾದುದ್ದನ್ನು ಕಸಿದುಕೊಳ್ಳಲಾಗುತ್ತಿದೆ. ಹಾಗಾಗಿ,ಜಾತಿವಾದದ ವಿರುದ್ಧ ಬೃಹತ್ ಆಂದೋಲನ ರೂಪುಗೊಳ್ಳಬೇಕು’ ಎಂದರು.
ಕಾಂಗ್ರೆಸ್ ಮುಖಂಡ ಎಚ್.ಆಂಜನೇಯ, ‘ದೇಶದಲ್ಲಿ ಫ್ಯಾಸಿಸ್ಟ್ ಶಕ್ತಿಗಳ ದಬ್ಬಾಳಿಕೆ ಮಿತಿ ಮೀರಿದೆ. ಕೇಂದ್ರದಲ್ಲಿರುವ ಮನುವಾದಿ ಸರ್ಕಾರವು ವ್ಯವಸ್ಥೆ ವಿರುದ್ಧ ಮತ್ತು ಆಡಳಿತ ವರ್ಗದ ವಿರುದ್ಧ ಮಾತನಾಡುವ, ಬರೆಯುವವರನ್ನು ಹಾಗೂ ಹೋರಾಟಗಾರರನ್ನು ಜೈಲಿಗೆ ತಳ್ಳುವ ಹುನ್ನಾರ ನಡೆಸುತ್ತಿದೆ. ಈ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯದ ಹರಣವಾಗುತ್ತಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.