ADVERTISEMENT

ಎಚ್‌.ಡಿ. ಕುಮಾರಸ್ವಾಮಿ– ಬಿ.ಎಸ್‌. ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 10:01 IST
Last Updated 11 ಸೆಪ್ಟೆಂಬರ್ 2020, 10:01 IST
ಎಚ್.ಡಿ. ಕುಮಾರಸ್ವಾಮಿ
ಎಚ್.ಡಿ. ಕುಮಾರಸ್ವಾಮಿ   

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಭೇಟಿ ಮಾಡಿ, ದಾಸರಹಳ್ಳಿಯಲ್ಲಿ ಇತ್ತೀಚೆಗೆ ಬಿದ್ದ ಭಾರಿ ಮಳೆಯಿಂದ ಆಗಿರುವ ನಷ್ಟಕ್ಕೆ ಪರಿಹಾರ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ.

ಮೈತ್ರಿ ಸರ್ಕಾರ ಪತನವಾದ ಬಳಿಕ ಇದೇ ಮೊದಲ ಬಾರಿಗೆ ಇಬ್ಬರ ಭೇಟಿ ಆಗಿದೆ. ಇದಕ್ಕೆ ಕೆಲವರು ರಾಜಕೀಯ ಬಣ್ಣ ನೀಡಿದರೂ, ರಾಜಕೀಯದ ಕುರಿತು ಯಾವುದೇ ಚರ್ಚೆ ನಡೆದಿಲ್ಲ. ದಾಸರಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ತಕ್ಷಣವೇ ಆಗಬೇಕಾಗಿರುವ ಕೆಲಸಗಳು ಮತ್ತು ರಾಮನಗರ ಕ್ಷೇತ್ರಕ್ಕೆ ಅನುದಾನ ಬಿಡುಗಡೆಗೆ ಸಂಬಂಧಿಸಿದಂತೆ ಮಾತುಕತೆಗೆ ಬಂದಿದ್ದರು ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಸಿವೆ.

ಇಬ್ಬರೂ ನಾಯಕರು ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಬಳಿಕ ಕುಮಾರಸ್ವಾಮಿ ಸುದ್ದಿಗಾರರ ಜತೆ ಮಾತನಾಡಿ, ಮಳೆಯಿಂದ ದಾಸರಹಳ್ಳಿ ಕ್ಷೇತ್ರದಲ್ಲಿ ಭಾರಿ ಹಾನಿ ಆಗಿರುವುದರಿಂದ ಪರಿಹಾರ ಒದಗಿಸುವುದೂ ಸೇರಿ ವಿವಿಧ ವಿಷಯ ಕುರಿತು ಚರ್ಚಿಸಲು ಬಂದಿದ್ದಾಗಿ ತಿಳಿಸಿದರು.

ADVERTISEMENT

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಮಂಜುನಾಥ್‌ ಅವರೂ ಕುಮಾರಸ್ವಾಮಿ ಜತೆಗಿದ್ದರು. ನಗರದಲ್ಲಿ ಮಂಜುನಾಥ್‌ ಜೆಡಿಎಸ್‌ನಿಂದ ಗೆದ್ದಿರುವ ಏಕೈಕ ಶಾಸಕ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.