ಬೆಂಗಳೂರು: ರಾಯಚೂರು ಜಿಲ್ಲೆಯ ಕಾಗಿನೆಲೆ ಮಹಾಸಂಸ್ಥಾನ ಕನಕ ಗುರುಪೀಠ ಹಾಲುಮತ ಕೇಂದ್ರದ ವತಿಯಿಂದ ‘ಹಾಲುಮತ ಸಂಸ್ಕೃತಿ ವೈಭವ–2020’ ಕಾರ್ಯಕ್ರಮವನ್ನು ಇದೇ 12ರಿಂದ 14ರವರೆಗೆ ಹಮ್ಮಿಕೊಳ್ಳಲಾಗಿದೆ’ ಎಂದುಕನಕ ಗುರುಪೀಠದ ಸಿದ್ದರಾಮಾನಂದ ಸ್ವಾಮೀಜಿ ತಿಳಿಸಿದರು.
ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ತಿಂಥಣಿಯಲ್ಲಿರುವ ಹಾಲುಮತ ಕೇಂದ್ರದಲ್ಲಿ ಕಾರ್ಯಕ್ರಮ ನಡೆಯಲಿದೆ. 12ರಂದು ಬೆಳಿಗ್ಗೆ 9 ಗಂಟೆಗೆ ಹೈದರಾಬಾದ್ನ ವಿಧಾನ ಪರಿಷತ್ ಸದಸ್ಯ ಉಗ್ಗೆ ಮಲ್ಲೇಶಂ ಅವರು ಧ್ವಜಾರೋಹಣ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ನಿರಂಜನಾನಂದಪುರಿ ಸ್ವಾಮೀಜಿ, ಶಿವಾನಂದಪುರಿ ಸ್ವಾಮೀಜಿ ಹಾಗೂ ಈಶ್ವರಾನಂದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ’ ಎಂದು ತಿಳಿಸಿದರು.
‘ಮಧ್ಯಾಹ್ನ 12 ಗಂಟೆಗೆ ನಡೆಯುವ ಹಾಲುಮತ–ಗಂಗಾಮತ ಸಮಾವೇಶವನ್ನು ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮ ಅಧ್ಯಕ್ಷ ಬಾಬುರಾವ್ ಚಿಂಚನಸೂರ ಉದ್ಘಾಟಿಸಲಿದ್ದಾರೆ. ಕಾಂಗ್ರೆಸ್ ಮುಖಂಡ ಎಚ್.ಎಂ.ರೇವಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಅತಿಥಿಗಳಾಗಿ ಶಾಸಕ ಯತೀಂದ್ರ ಸಿದ್ದರಾಮಯ್ಯ, ಸಂಸದ ಕುರವ ಗೋರಂಟ್ಲ ಮಾಧವಲು ಭಾಗವಹಿಸಲಿದ್ದಾರೆ’ ಎಂದು ವಿವರಿಸಿದರು.
‘ಜ.13ರಂದು ನಡೆಯುವ ಆದಿವಾಸಿ ಸಂಸ್ಕೃತಿ ಸಮಾವೇಶವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ವಿದ್ಯಾನಿಧಿ ಪ್ರಕಾಶನದ ಜಯದೇವ ಮೆಣಸಗಿ ಅವರಿಗೆ ‘ಹಾಲುಮತ ಭಾಸ್ಕರ ಪ್ರಶಸ್ತಿ’, ಕನ್ನಡ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಎಂ.ಮೇತ್ರಿ ಅವರಿಗೆ ‘ಕನಕರತ್ನ ಪ್ರಶಸ್ತಿ’, ಕೊಡಗಿನ ಆದಿವಾಸಿ ಹೋರಾಟಗಾರ್ತಿ ಮುತ್ತಮ್ಮ ಅವರಿಗೆ ‘ಸಿದ್ಧಶ್ರೀ’ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಕೇಂದ್ರ ಸಚಿವ ಫಗ್ಗನ್ ಸಿಂಗ್ ಕುಲಸ್ತೆ, ರೇಣುಕಾಸಿಂಗ್ ಸರುತಾ ಹಾಗೂ ಸಚಿವ ಬಿ. ಶ್ರೀರಾಮುಲು ಭಾಗವಹಿಸಲಿದ್ದಾರೆ. 14ರಂದು ಜಗದ್ಗುರು ರೇವಣಸಿದ್ದೇಶ್ವರ ಸಿದ್ದರಾಮೇಶ್ವರ ಸ್ಮರಣೋತ್ಸವ ನಡೆಯಲಿದೆ’ ಎಂದು ಮಾಹಿತಿ ನೀಡಿದರು.
ಬಿಜೆಪಿ ಮುಖಂಡ ಎಚ್.ವಿಶ್ವನಾಥ್ ಭಾಗವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.