ADVERTISEMENT

‘ಬೆಂಗಳೂರಿಗೆ ಬಿಜೆಪಿ ಕೊಡುಗೆ ಶೂನ್ಯ’

ಕಾಂಗ್ರೆಸ್‌ ಅಭ್ಯರ್ಥಿ ಹರಿಪ್ರಸಾದ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2019, 20:08 IST
Last Updated 14 ಏಪ್ರಿಲ್ 2019, 20:08 IST
ಬಿ.ಕೆ.ಹರಿಪ್ರಸಾದ್‌
ಬಿ.ಕೆ.ಹರಿಪ್ರಸಾದ್‌   

ಬೆಂಗಳೂರು: ‘ಬೆಂಗಳೂರು ನಗರಕ್ಕೆ ಬಿಜೆಪಿಯ ಕೊಡುಗೆ ಶೂನ್ಯ, ಇಲ್ಲಿಯವರೆಗೂ ಯಾವುದೇ ಅಭಿವೃದ್ಧಿ ಕೆಲಸ ಮಾಡಿಲ್ಲ. ನಗರದಲ್ಲಿ ಏನಾದರೂ ಅಭಿವೃದ್ಧಿ ಆಗಿದ್ದರೆ, ಅದು ಕಾಂಗ್ರೆಸ್‌ನಿಂದ ಮಾತ್ರ’ ಎಂದು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಬಿ.ಕೆ.ಹರಿಪ್ರಸಾದ್‌ ಹೇಳಿದರು.

ಭಾನುವಾರ ಬೆಂಗಳೂರು ಪ್ರೆಸ್‌ಕ್ಲಬ್‌ ಆಯೋಜಿಸಿದ್ದ ‘ಮಾತು ಮಂಥನ’ ಸಂವಾದದಲ್ಲಿ ಮಾತನಾಡಿ, ‘ಬಿಜೆಪಿಯವರು ಬೆಂಗಳೂರಿಗೆ ಮಸಿ ಬಳಿಯುವ ಕೆಲಸ ಮಾಡಿದ್ದಾರೆ’ ಎಂದು ಹರಿಹಾಯ್ದರು.

‘ಬೆಂಗಳೂರು ಮಾದರಿ ನಗರವಾಗಿದೆ. ಇದಕ್ಕೆ ಬೆಂಗಳೂರಿನ ಬಿಜೆಪಿ ಸಂಸದರಿಂದ ಯಾವುದೇ ಕೊಡುಗೆ ಇಲ್ಲ. ಇಲ್ಲಿನ ಅಭಿವೃದ್ಧಿಗೆ ಜಾಫರ್‌ಷರೀಫ್‌ ಅವರಂತಹ ಕಾಂಗ್ರೆಸ್‌ ನಾಯಕರ ಕೊಡುಗೆ ದೊಡ್ಡದು’ ಎಂದರು.

ADVERTISEMENT

‘ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆ ಮತ್ತು ಕಸದ ಸಮಸ್ಯೆ ನಿರ್ವಹಣೆಗಾಗಿ ಅಂತರರಾಷ್ಟ್ರೀಯ ಮಟ್ಟದ ಯೋಜನೆಗಳನ್ನು ತರಬೇಕಾಗಿದೆ’ ಎಂದು ಹರಿಪ್ರಸಾದ್‌ ತಿಳಿಸಿದರು.

‘ಕಾಂಗ್ರೆಸ್‌ ಆಡಳಿತದ ಅವಧಿಯಲ್ಲಿ ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆಯಿತು. ತಮ್ಮ ಅವಧಿಯಲ್ಲಿ ಬಾಂಬ್‌ ಸ್ಫೋಟ ನಡೆದಿಲ್ಲ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರ ಹೇಳಿಕೆ ಮೂರ್ಖತನದ ಪರಮಾವಧಿ’ ಎಂದು ಅವರು ಕಟಕಿಯಾಡಿದರು.

‘ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಮತ್ತು ನನ್ನ ಮಧ್ಯೆ ಉತ್ತಮ ಸಂಬಂಧವಿದೆ. ಅವರ ಆಶೀರ್ವಾದ ನನ್ನ ಮೇಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.