ಬೆಂಗಳೂರು: ‘ಅಬಲೆಯರನ್ನು ಗೌರವಿಸೋಣ - ಅತ್ಯಾಚಾರಿಗೆ ತಕ್ಕ ಶಾಸ್ತಿ ಮಾಡೋಣ’ ಎಂಬ ಘೋಷ ವಾಕ್ಯದಡಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್ಎಸ್) ಪಕ್ಷವು ಸೋಮವಾರ ‘ಹಾಸನ ಚಲೋ’ ಕಾರ್ಯಕ್ರಮ ಹಮ್ಮಿಕೊಂಡಿದೆ.
ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪಕ್ಷದ ರಾಜ್ಯ ಘಟಕದ ಕಾರ್ಯದರ್ಶಿ ಮಂಜುನಾಥ್ ಎಸ್. ‘ಸಂಸದ ಪ್ರಜ್ವಲ್ ರೇವಣ್ಣ ತನ್ನ ಬಳಿಗೆ ಸಹಾಯ ಯಾಚಿಸಿ ಬಂದ ನೂರಾರು ಹೆಣ್ಣುಮಕ್ಕಳನ್ನು, ಅಧಿಕಾರ ಮತ್ತು ಸಾಂದರ್ಭಿಕ ಲಾಭ ಪಡೆದು ಲೈಂಗಿಕವಾಗಿ ಶೋಷಣೆ ಮಾಡಿರುವುದನ್ನು ಖಂಡಿಸಿ ಈ ಅಭಿಯಾನವನ್ನು ಕೈಗೊಳ್ಳಲಾಗಿದೆ’ ಎಂದು ತಿಳಿಸಿದರು.
‘ಪೆನ್ ಡ್ರೈವ್ ಪ್ರಕರಣದ ಕುರಿತು ಪಾರದರ್ಶಕವಾಗಿ ತನಿಖೆ ಆಗಬೇಕು. ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕಾದರೆ ಪ್ರಜ್ವಲ್ ರೇವಣ್ಣ ಕುಟುಂಬದ ಕೃಪಾಕಟಾಕ್ಷದಿಂದ ಹಾಸನ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ, ಆ ಕುಟುಂಬದ ಋಣದಲ್ಲಿರುವುದಾಗಿ ಭಾವಿಸಿರುವ ಹಲವಾರು ನೌಕರರು ಹಾಗೂ ಅಧಿಕಾರಿಗಳನ್ನು ಈ ಪ್ರಕರಣದ ತನಿಖೆ ಮುಗಿಯುವವರೆಗೆ ಬೇರೆ ಜಿಲ್ಲೆಗೆ ವರ್ಗಾಯಿಸಬೇಕು’ ಎಂದು ಆಗ್ರಹಿಸಿದರು.
ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳು ಕೇವಲ ರಾಜಕೀಯ ಲಾಭ ಪಡೆಯುವ ದುರುದ್ದೇಶದಿಂದ ಈ ಪ್ರಕರಣವನ್ನು ಬಳಸಿಕೊಳ್ಳುತ್ತಿವೆ ಎಂದು ಟೀಕಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.