ADVERTISEMENT

ದ್ವೇಷದ ಹೇಳಿಕೆ: ಪಿಐಎಲ್ ಆಗಿ ಪರಿವರ್ತಿಸಲು ಕೋರಿಕೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2022, 19:10 IST
Last Updated 18 ಏಪ್ರಿಲ್ 2022, 19:10 IST
   

ಬೆಂಗಳೂರು: ‘ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷದ ಮತ್ತು ಪ್ರಚೋದನಾಕಾರಿ ಹೇಳಿಕೆ ನೀಡುತ್ತಿರುವ ಆಡಳಿತಾರೂಢ ಬಿಜೆಪಿಯ ಕೆಲ ಶಾಸಕರು, ಸಚಿವರು ಮತ್ತು ಸಂಸದರ ವಿರುದ್ಧ ಸ್ವಯಂ ಪ್ರೇರಿತ ಕ್ರಮ ಜರುಗಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂದು ಕೋರಿರುವ ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸುವಂತೆ ಕೋರಲಾಗಿದೆ.

ಈ ಕುರಿತಂತೆ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ನಿವಾಸಿ ಮೊಹಮ್ಮದ್ ಖಲೀವುಲ್ಲಾ ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆ ನ್ಯಾಯಮೂರ್ತಿ ಎಸ್.ಜಿ. ಪಂಡಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, ‘ಈ ಪ್ರಕರಣದಲ್ಲಿ ಅರ್ಜಿದಾರರು ಹೇಗೆ ಬಾಧಿತರಾಗಿದ್ದಾರೆ ಎಂಬುದನ್ನು ವಿವರಿಸಿ’ ಎಂದು ಅರ್ಜಿದಾರರ ಪರ ವಕೀಲರಿಗೆ ಸೂಚಿಸಿತು.

ADVERTISEMENT

ಅರ್ಜಿದಾರರ ಪರ ವಕೀಲ ರಹಮತ್ ಉಲ್ಲಾ ಕೊತ್ವಾಲ್, ‘ಅರ್ಜಿಯಲ್ಲಿ ಹೆಸರಿಸಲಾಗಿರುವ ಪ್ರತಿವಾದಿಗಳು ಮುಸ್ಲಿಂ ಸಮುದಾಯವನ್ನು ಅಪರಾಧಿಗಳು ಎಂಬಂತೆ ಬಿಂಬಿಸುತ್ತಿದ್ದಾರೆ’ ಎಂದು ಆಕ್ಷೇಪಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಹಾಗಾದರೆ ನೀವು ಸಕ್ಷಮ ನ್ಯಾಯಾಲಯದ ಮೊರೆ ಹೋಗಬಹುದು’ ಎಂದು ಸೂಚಿಸಿತು.

ಆಗ ಕೊತ್ವಾಲ್, ‘ಈ ರಿಟ್ ಅರ್ಜಿಯನ್ನು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನಾಗಿ ಪರಿವರ್ತಿಸಿ ಮಂಡಿಸಲು ಬಯಸಿದ್ದೇನೆ. ಅದಕ್ಕೆ ಅನುಮತಿ ನೀಡಬೇಕು’ ಎಂದು ಕೋರಿದರು.

ಈ ಮನವಿ ಪರಿಗಣಿಸಿದ ನ್ಯಾಯಪೀಠ, ‘ಈ ಕುರಿತಂತೆ ಅರ್ಜಿದಾರರು ಮುಖ್ಯ ನ್ಯಾಯಮೂರ್ತಿಗಳ ಮುಂದೆ ಸೂಕ್ತ ಜ್ಞಾಪನಾ ಪತ್ರ ಮಂಡಿಸಬೇಕು. ಮುಖ್ಯ ನ್ಯಾಯಮೂರ್ತಿಗಳ ಸೂಚನೆ ಅನುಸಾರ ಅರ್ಜಿಯನ್ನು ರೋಸ್ಟರ್ ಪೀಠದ (ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸುವ ಪೀಠ) ಮುಂದೆ ವಿಚಾರಣೆಗೆ ನಿಗದಿಪಡಿಸಬಹುದು’ ಎಂದು ರಿಜಿಸ್ಟ್ರಾರ್ ಜನರಲ್‌ ಅವರಿಗೆ ನಿರ್ದೇಶಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.