ಬೆಂಗಳೂರು: ‘ಮೊಬೈಲ್ ವ್ಯಸನ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ತೊಡಕಾಗುತ್ತಿದೆ’ ಎಂದು ಉಪಮುಖ್ಯಮಂತ್ರಿಡಾ.ಸಿ.ಎನ್. ಅಶ್ವತ್ಥನಾರಾಯಣ ಅಭಿಮತ ವ್ಯಕ್ತಪಡಿಸಿದರು.
ಅಖಿಲ ಹವ್ಯಕ ಮಹಾಸಭಾ ನಗರದಲ್ಲಿ ಭಾನುವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ, ಮಾತನಾಡಿದರು.
‘ಮಕ್ಕಳು ಮನೆಯಿಂದ ಹೊರಗಡೆ ಹೋದಲ್ಲಿ ಶೈಕ್ಷಣಿಕವಾಗಿ ಹಿನ್ನಡೆ ಅನುಭವಿಸಬಹುದೆಂಬ ಕಾರಣಕ್ಕೆ ಪೋಷಕರು ಸಮಾಜದಿಂದ ದೂರ ಮಾಡುತ್ತಿದ್ದಾರೆ. ಇದರಿಂದಾಗಿ ಮಕ್ಕಳು ದಿನವಿಡೀ ಮೊಬೈಲ್ ಬಳಸುವ ಮೂಲಕ ವ್ಯಸನಕ್ಕೆ ಒಳಗಾಗುತ್ತಿದ್ದಾರೆ. ಈ ವ್ಯಸನವು ಮಾನಸಿಕ ಕಾಯಿಲೆಗಳಿಗೆ ನೂಕುವ ಸಾಧ್ಯತೆಗಳಿವೆ. ಹಾಗಾಗಿ ನೂತನರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ದೈಹಿಕ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ’ ಎಂದು ತಿಳಿಸಿದರು.
‘ಪ್ರತಿಯೊಂದು ಶಿಕ್ಷಣ ಸಂಸ್ಥೆಯೂ ಸ್ವಾಯತ್ತವಾಗಬೇಕು. ಆಗ ಗುಣಮಟ್ಟದ ಶಿಕ್ಷಣ ದೊರೆಯುವ ಜತೆಗೆ ಹೊಸ ಆವಿಷ್ಕಾರಗಳು ಸಾಧ್ಯವಾಗಲಿವೆ. ವಿದ್ಯಾರ್ಥಿಗಳ ಅರ್ಹತೆಯನ್ನು ಕೂಡಾ ಶಿಕ್ಷಣ ಸಂಸ್ಥೆಯ ಸಾಧನೆಯ ಆಧಾರದ ಮೇಲೆಯೇ ಅಳೆಯಲಾಗುತ್ತಿದೆ. ಹಾಗಾಗಿ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಕೆಲ ಬದಲಾವಣೆಗಳನ್ನು ತರಲಾಗುತ್ತದೆ. ಅದೇ ರೀತಿ, ವೇಗವಾಗಿ ಬೆಳೆಯುತ್ತಿರುವ ತಂತ್ರಜ್ಞಾನಗಳನ್ನು ನಾವು ಪರಿಣಾಮಕಾರಿಯಾಗಿ ಅಳವಡಿಸಿಕೊಳ್ಳಬೇಕು’ ಎಂದರು.
ಹವ್ಯಕ ಮಹಾಸಭಾದ ಅಧ್ಯಕ್ಷ ಡಾ. ಗಿರಿಧರ್ ಕಜೆ, ‘ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳಿಂದ ಅಶ್ವತ್ಥ ನಾರಾಯಣ ಜನರ ವಿಶ್ವಾಸ ಗಳಿಸಿದರು. ಕಿರಿಯ ವಯಸ್ಸಿನಲ್ಲಿಯೇ ಉನ್ನತ ಸ್ಥಾನವನ್ನು ಅಲಂಕರಿಸಿದರು. ರಾಜಕೀಯ ಕ್ಷೇತ್ರದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ’ ಎಂದು ಹಾರೈಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.