ಬೆಂಗಳೂರು:‘ನನ್ನ ಕುಟುಂಬದಲ್ಲಿ 10ರಿಂದ 12 ಜನ ಕ್ಲಾಸ್ ಒನ್ ಅಧಿಕಾರಿಗಳು ಇಲ್ಲ. ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿಯವರು ಸುಳ್ಳು ಹೇಳಿಕೆ ನೀಡುವುದನ್ನು ನಿಲ್ಲಿಸಲಿ’ ಎಂದು ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಬಿಜೆಪಿ ಅಭ್ಯರ್ಥಿ ಪುಟ್ಟಣ್ಣ ಕುಟುಕಿದ್ದಾರೆ.
‘ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶಿಕ್ಷಕರೊಂದಿಗೆ ನಡೆದ ಸಭೆಯಲ್ಲಿ, ಪುಟ್ಟಣ್ಣ ಕುಟುಂಬದ 10–12 ಜನಕ್ಕೆ ಕ್ಲಾಸ್ ಒನ್ ಹುದ್ದೆ ಕೊಡಿಸಿದ್ದೇನೆ. 1999-2000 ರಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಉಪನ್ಯಾಸಕರ ನೇಮಕಾತಿ ನಡೆದಿತ್ತು. ಆಗ ಎಚ್.ಎನ್. ಕೃಷ್ಣ ಕೆಪಿಎಸ್ಸಿ ಅಧ್ಯಕ್ಷರಾಗಿದ್ದರು. ಆದರೆ ಈ (ಪುಟ್ಟಣ್ಣ) ವ್ಯಕ್ತಿ ಅವರಿವರ ಅರ್ಜಿ ಹಿಡಿದುಕೊಂಡು ಬಂದು, ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾಗಿ ವರದಿಯಾಗಿತ್ತು. ಈ ಆರೋಪದಿಂದ ನನಗೆ ಆಘಾತವಾಗಿತ್ತು. ಚುನಾವಣೆಗೆ ಸ್ಪರ್ಧಿಸಿರುವ ಈ ಸಂದರ್ಭದಲ್ಲಿ ಮುಜುಗರವೂ ಆಗಿತ್ತು. ಇಂತಹ ಯಾವುದೇ ಹೇಳಿಕೆ ನೀಡಿಲ್ಲ ಎಂದು ಈಗ ಕುಮಾರಸ್ವಾಮಿಯವರು ಸ್ಪಷ್ಟೀಕರಣ ನೀಡಿದ್ದಾರೆ. ಅದನ್ನು ನಾನು ಸ್ವಾಗತಿಸುತ್ತೇನೆ’ ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.