ADVERTISEMENT

ಅನುದಾನ ಮೊತ್ತದಲ್ಲಿ ತಾರತಮ್ಯ: ಮುಖ್ಯಮಂತ್ರಿಗೆ ಎಚ್.ಡಿ. ದೇವೇಗೌಡ ಪತ್ರ

​ಪ್ರಜಾವಾಣಿ ವಾರ್ತೆ
Published 17 ಮೇ 2021, 18:54 IST
Last Updated 17 ಮೇ 2021, 18:54 IST
ಎಚ್.ಡಿ. ದೇವೇಗೌಡ
ಎಚ್.ಡಿ. ದೇವೇಗೌಡ   

ಬೆಂಗಳೂರು: ’ಬಿಬಿಎಂಪಿ ವ್ಯಾಪ್ತಿಯ ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಗೆ ಬರುವ ಹಳ್ಳಿಗಳಲ್ಲಿ ವಿವಿಧ ದುರಸ್ತಿ ಕಾರ್ಯಕ್ಕೆ ಸರ್ಕಾರ ಅನುಮೋದನೆ ನೀಡಿರುವ ಅನುದಾನದ ಮೊತ್ತದಲ್ಲಿ ತಾರತಮ್ಯ ಎಸಗಲಾಗಿದೆ. ಕ್ಷೇತ್ರಕ್ಕೆ ನ್ಯಾಯಯುತವಾಗಿ ಸಲ್ಲಬೇಕಾದ ಅನುದಾನವನ್ನು ಶೀಘ್ರವೇ ಬಿಡುಗಡೆ ಮಾಡಬೇಕು‘ ಎಂದು ಒತ್ತಾಯಿಸಿ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

’ಬಿಬಿಎಂಪಿಗೆ ಹೊಸದಾಗಿ ಸೇರಿರುವ 110 ಹಳ್ಳಿಗಳ ಪೈಕಿ ದಾಸರಹಳ್ಳಿ ಕ್ಷೇತ್ರದ ಐದು ಹಳ್ಳಿಗಳಲ್ಲಿ ಜಲಮಂಡಳಿಯು ಕುಡಿಯುವ ನೀರು ಮತ್ತು ಒಳಚರಂಡಿ ಕಾಮಗಾರಿಗಳನ್ನು ನಿರ್ವಹಿಸುತ್ತಿದೆ. ಈ ಕಾಮಗಾರಿಗಾಗಿ ಬಿಬಿಎಂಪಿ ಆಯುಕ್ತರು ನಗರಾಭಿವೃದ್ಧಿ ಇಲಾಖೆಗೆ ₹405.96 ಕೋಟಿ ಮೊತ್ತದ ಅಂದಾಜು ವೆಚ್ಚದ ಪ್ರಸ್ತಾವ ಸಲ್ಲಿಸಿದ್ದಾರೆ. ನಗರಾಭಿವೃದ್ಧಿ ಇಲಾಖೆಯು ₹327 ಕೋಟಿ ಮೊತ್ತದ ಅನುದಾನ ಬಿಡುಗಡೆ ಮಾಡಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿದೆ‘ ಎಂದು ಅವರು ತಿಳಿಸಿದ್ದಾರೆ.

’ಈ ಪೈಕಿ ಬೆಂಗಳೂರು ದಕ್ಷಿಣ ಕ್ಷೇತ್ರಕ್ಕೆ ₹110 ಕೋಟಿ ಅನುದಾನ ಬಿಡುಗಡೆ ಮಾಡಲು ಪ್ರಸ್ತಾವ ಸಲ್ಲಿಸಿದ್ದರೂ ಸರ್ಕಾರದಿಂದ ₹190 ಕೋಟಿ ಬಿಡುಗಡೆಗೆ ಅನುಮೋದನೆ ನೀಡಲಾಗಿದೆ. ಯಲಹಂಕ ಮತ್ತು ಬ್ಯಾಟರಾಯನಪುರ ಕ್ಷೇತ್ರಕ್ಕೆ ₹156 ಕೋಟಿ ಬಿಡುಗಡೆ ಮಾಡಬೇಕು ಎಂದು ಪ್ರಸ್ತಾವದಲ್ಲಿ ಹೇಳಿದ್ದರೂ ₹185 ಕೋಟಿಗೆ ಅನುಮೋದನೆ ನೀಡಲಾಗಿದೆ. ಆದರೆ, ದಾಸರಹಳ್ಳಿ ಕ್ಷೇತ್ರಕ್ಕೆ ₹107.55 ಕೋಟಿ ನೀಡುವುದಾಗಿ ನೀವೇ (ಬಿ.ಎಸ್. ಯಡಿಯೂರಪ್ಪ) ಲಿಖಿತ ಉತ್ತರ ನೀಡಿದ್ದರೂ, ₹25 ಕೋಟಿಗಳ ಅನುದಾನಕ್ಕೆ ಮಾತ್ರ ಕ್ರಿಯಾಯೋಜನೆ ಸಲ್ಲಿಸಲು ಆದೇಶಿಸಲಾಗಿದೆ. ಈ ತಾರತಮ್ಯ ಹೋಗಲಾಡಿಸಿ, ಪ್ರಸ್ತಾವ ಸಲ್ಲಿಸಿದ್ದ ಮೊತ್ತದಷ್ಟು ಅನುದಾನ ನೀಡಬೇಕು‘ ಎಂದು ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ADVERTISEMENT

ದಾಸರಹಳ್ಳಿ ಕ್ಷೇತ್ರದ ಜೆಡಿಎಸ್‌ ಶಾಸಕ ಆರ್. ಮಂಜುನಾಥ್ ಕೂಡ ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.