ಬೆಂಗಳೂರು: ಪತ್ರಕರ್ತರಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ ಒದಗಿಸುವ ಸಂಬಂಧ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಣಿಪಾಲ್ ಆಸ್ಪತ್ರೆಯು ‘ಮಾಧ್ಯಮ ಆರೋಗ್ಯ ಕಾರ್ಡ್’ಪ್ರಾರಂಭಿಸಿದೆ.
ಆಸ್ಪತ್ರೆಗಳ ಅಧ್ಯಕ್ಷ ಡಾ. ಸುದರ್ಶನ್ ಬಲ್ಲಾಳ್ ಅವರು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಮಾಧ್ಯಮ ಆರೋಗ್ಯ ಕಾರ್ಡ್ ಹಸ್ತಾಂತರಿಸುವ ಮೂಲಕ ಈ ಯೋಜನೆಗೆ ಚಾಲನೆ ನೀಡಿದರು. ಈ ಕಾರ್ಡ್ ಹೊಂದಿರುವವರಿಗೆ ಹೊರರೋಗಿ ವಿಭಾಗದ ಸಲಹೆ, ಪ್ರಯೋಗಾಲಯಗಳಲ್ಲಿ ಪರೀಕ್ಷೆ, ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ವೆಚ್ಚದಲ್ಲಿ ಶೇ 20 ರಷ್ಟು ರಿಯಾಯಿತಿ ದೊರೆಯಲಿದೆ. ಹಳೆ ವಿಮಾನ ನಿಲ್ದಾಣ ರಸ್ತೆ, ವೈಟ್ ಫೀಲ್ಡ್ ಹಾಗೂ ಜಯನಗರದ ಘಟಕದಲ್ಲಿ ಕಾರ್ಡ್ನ ಸೌಲಭ್ಯ ಪಡೆದುಕೊಳ್ಳಬಹುದಾಗಿದೆ.
‘ವೇಗವಾಗಿ ಹರಡುತ್ತಿರುವ ಕೊರೊನಾ ಸೋಂಕು, ವ್ಯಕ್ತಿಯ ಆರೋಗ್ಯದ ಮೇಲೆ ದೀರ್ಘಕಾಲಿನ ಪರಿಣಾಮಗಳನ್ನು ಬೀರುವ ಸಾಧ್ಯತೆಯಿದೆ. ಹೃದಯ, ಮೂತ್ರಪಿಂಡ, ಶ್ವಾಸಕೋಶ ಸೇರಿದಂತೆ ವಿವಿಧ ಅಂಗಾಂಗಗಳಿಗೆ ಕೂಡ ಹಾನಿ ಮಾಡುವ ಸಾಧ್ಯತೆ ಇದೆ. ಕಾರ್ಡ್ ಹೊಂದಿರುವವರಿಗೆ ಕೋವಿಡ್ ನಂತರದ ಸಮಸ್ಯೆಗಳಿಗೆ ಚಿಕಿತ್ಸೆ ಹಾಗೂ ಪರೀಕ್ಷೆಗಳ ಸೇವೆಯನ್ನೂ ರಿಯಾಯಿತಿ ದರದಲ್ಲಿ ನೀಡಲಾಗುತ್ತದೆ’ ಎಂದು ಡಾ. ಸುದರ್ಶನ್ ಬಲ್ಲಾಳ್ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.