ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ಪ್ರಧಾನ ಕಚೇರಿಯನ್ನು ರಾಮನಗರದಲ್ಲಿ 178 ಎಕರೆಯ ಕ್ಯಾಂಪಸ್ಗೆ ಸ್ಥಳಾಂತರಿಸಿ, ಅಲ್ಲಿ ‘ಆರೋಗ್ಯ ನಗರ' ನಿರ್ಮಿಸಲಾಗುವುದು’ ಎಂದು ಉಪ ಮುಖ್ಯಮಂತ್ರಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.
ಉಪಮುಖ್ಯಮಂತ್ರಿ, ಉನ್ನತ ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾಗಿ 100 ದಿನಗಳು ಪೂರೈಸಿದ ಹಿನ್ನೆಲೆಯಲ್ಲಿ ನಗರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ‘ಆರೋಗ್ಯ ಕೇಂದ್ರಗಳ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆಗೆ ಒತ್ತು ನೀಡಲಾಗುವುದು. ಈ ನಿಟ್ಟಿನಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ ಇ- ಆಫೀಸ್ಗಳ ಮೂಲಕ ಇ-ಆಸ್ಪತ್ರೆಗಳನ್ನು ಪ್ರಾಥಮಿಕ ಆರೋಗ್ಯಕೇಂದ್ರಗಳ ಜತೆಗೆ ಸಂಪರ್ಕ ಬೆಸೆಯಲಾಗುತ್ತದೆ.ವೈದ್ಯಕೀಯ ಶಿಕ್ಷಣ ಮತ್ತು ಉನ್ನತ ಶಿಕ್ಷಣದಲ್ಲಿ ಸಂದರ್ಶನ ರಹಿತ ನೇಮಕ ವ್ಯವಸ್ಥೆ ಜಾರಿಗೊಳಿಸಲಾಗಿದೆ’ ಎಂದರು.
‘ವೈದ್ಯಕೀಯ ಮತ್ತು ಉನ್ನತ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ವಿವಿಧ ಕ್ಷೇತ್ರಗಳ ಮುಖಂಡರನ್ನು ಒಳಗೊಂಡ ವಿಷನ್ ಗ್ರೂಪ್ ತಯಾರಿಸಲಾಗಿದೆ. ಸಾರ್ವಜನಿಕರು ಕೂಡ ಈ ಬಗ್ಗೆ ಸಲಹೆ ನೀಡಬಹುದಾಗಿದೆ. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಉಪನ್ಯಾಸಗಳ ವಿಡಿಯೊಗಳು ಹಾಗೂ ಪಠ್ಯಕ್ರಮಗಳಿಗೆ ಪ್ರತ್ಯೇಕ ಡಿಜಿಟಲ್ ವೇದಿಕೆ ನಿರ್ಮಿಸಲಾಗುತ್ತದೆ.ಭಾಷಾ ಅಲ್ಪಸಂಖ್ಯಾತರ ಹಿತಾಸಕ್ತಿಗಳ ರಕ್ಷಣೆಗಾಗಿ ಭಾಷಾ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ರಾಜ್ಯ ಆಯೋಗ ಸ್ಥಾಪಿಸಲಾಗುವುದು’ ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.