ಬೆಂಗಳೂರು: ಆಯುಷ್ಮಾನ್ ಭಾರತ್– ಆರೋಗ್ಯ ಕರ್ನಾಟಕ ಯೋಜನೆಯನ್ನು ಪರಿಣಾಮಕಾರಿಯಾಗಿ ಜಾರಿಮಾಡಲು ಜಿಲ್ಲಾ ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಕಾರ್ಯನಿರ್ವಾಹಕರನ್ನು ನೇಮಿಸಿಕೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
2018 ನ.30ರಂದು ಜಾರಿಯಾದಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ 291 ಸಾಮಾನ್ಯ ದ್ವಿತೀಯ ಹಂತದ, 254 ಕ್ಲಿಷ್ಟಕರ ದ್ವಿತೀಯ ಹಂತದ, 900 ತೃತೀಯ ಹಾಗೂ 169 ತುರ್ತು ಚಿಕಿತ್ಸೆಯನ್ನು ಒದಗಿಸಲಾಗುತ್ತಿದೆ. ಚಿಕಿತ್ಸಾ ಮೊತ್ತವನ್ನು ಸುವರ್ಣ ಆರೋಗ್ಯ ಟ್ರಸ್ಟ್ ಮೂಲಕ ಪಡೆಯಲು ರೋಗಿಯ ಮಾಹಿತಿ ಹಾಗೂ ಚಿಕಿತ್ಸಾ ವಿವರವನ್ನು ಟ್ರಸ್ಟ್ನ ಪೋರ್ಟಲ್ನಲ್ಲಿ ದಾಖಲಿಸಬೇಕಾಗುತ್ತದೆ. ಆದರೆ, ಆಸ್ಪತ್ರೆಯಲ್ಲಿ ನಿಗದಿತ ಪ್ರಮಾಣದಲ್ಲಿ ಸಿಬ್ಬಂದಿ ಇಲ್ಲದ ಪರಿಣಾಮ ಹಣ ಮರುಪಾವತಿ ವಿಳಂಬವಾಗುತ್ತಿದೆ.
ಹಣ ಮರುಪಾವತಿ ಪ್ರಕ್ರಿಯೆಯನ್ನು ನಿಗದಿತ ಅವಧಿಯೊಳಗೆ ಮುಗಿಸುವ ಉದ್ದೇಶದಿಂದ ಪ್ರತಿ ತಾಲ್ಲೂಕು ಆಸ್ಪತ್ರೆಗೆ ಒಬ್ಬರು ಹಾಗೂ ಪ್ರತಿ ಜಿಲ್ಲಾ ಆಸ್ಪತ್ರೆಗೆ ಇಬ್ಬರು ಕಾರ್ಯನಿರ್ವಾಹಕರನ್ನು ನೇಮಿಸಿಕೊಳ್ಳುವಂತೆ ಇಲಾಖೆ ಸೂಚಿಸಿದೆ. 400ಕ್ಕಿಂತ ಅಧಿಕ ಹಾಸಿಗೆ ಇರುವ ಜಿಲ್ಲಾ ಆಸ್ಪತ್ರೆಯಲ್ಲಿ ಮೂವರನ್ನು ನೇಮಿಸಿಕೊಳ್ಳಬಹುದಾಗಿದೆ. ಜಿ.ಪಂ. ಸಿಇಒ ಅಧ್ಯಕ್ಷತೆಯ ಸಮಿತಿ ಆಸ್ಪತ್ರೆಗಳಿಗೆ ಅರ್ಹರನ್ನು ನೇಮಕಾತಿ ಮಾಡಬೇಕೆಂದು ಇಲಾಖೆ ತಿಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.