ADVERTISEMENT

ಕೋವಿಡ್: ಅರೆ ವೈದ್ಯಕೀಯ ಸಿಬ್ಬಂದಿಗೆ ಅಪಾಯ ಭತ್ಯೆ ಇನ್ನೂ ಕೈಸೇರಿಲ್ಲ

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2021, 12:47 IST
Last Updated 4 ಅಕ್ಟೋಬರ್ 2021, 12:47 IST
   

ಬೆಂಗಳೂರು: ‘ಕೋವಿಡ್‌ ಸೇನಾನಿಗಳಾಗಿ ಕೆಲಸ ಮಾಡುವ ಶುಶ್ರೂಷಕರಿಗೆ ಅಪಾಯ ಭತ್ಯೆ ನೀಡುವುದಾಗಿ ಸರ್ಕಾರ ಹೇಳಿತ್ತು. ಆದರೆ ಅರೆ ವೈದ್ಯಕೀಯ ಸಿಬ್ಬಂದಿಗೆ ಈ ಭತ್ಯೆ ಇನ್ನೂ ಕೈಸೇರಿಲ್ಲ. ಈಗಲಾದರೂ ಇದನ್ನು ಒದಗಿಸಲು ಕ್ರಮ ಕೈಗೊಳ್ಳಿ’ ಎಂದುಕರ್ನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘದ ಅಧ್ಯಕ್ಷ ಆರ್‌.ಶ್ರೀನಿವಾಸ್‌, ಸರ್ಕಾರವನ್ನು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ‘ಕೋವಿಡ್ ಸಂದರ್ಭದಲ್ಲಿ ಜನರ ಆರೋಗ್ಯ ರಕ್ಷಣೆಗಾಗಿ ಕೈಗೊಂಡ ಕಾರ್ಯಗಳಿಗಾಗಿ ಕರ್ನಾಟಕಕ್ಕೆ ‘ದಿ ಇಂಡಿಯಾ ಟುಡೇ ಸಮೂಹ’ದಿಂದ ‘ಅತ್ಯುತ್ತಮ ರಾಜ್ಯ’ ಪ್ರಶಸ್ತಿ ಲಭಿಸಿದೆ. ಇದಕ್ಕಾಗಿ ಸಚಿವ ಡಾ.ಕೆ.ಸುಧಾಕರ್‌ ಅವರನ್ನು ಅಭಿನಂದಿಸುತ್ತೇವೆ.ಕೋವಿಡ್‌ ಸಮಯದಲ್ಲಿ ಅರೆ ವೈದ್ಯಕೀಯ ಸಿಬ್ಬಂದಿ ಜೀವದ ಹಂಗು ತೊರೆದು ದಿನದ 24 ಗಂಟೆಯೂ ಕೆಲಸ ಮಾಡಿದ್ದಾರೆ. ಈ ಪ್ರಶಸ್ತಿಗೆ ಅವರ ಪರಿಶ್ರಮವೂ ಕಾರಣ. ಇದನ್ನು ಗಮನದಲ್ಲಿಟ್ಟುಕೊಂಡು ಸಚಿವರು ನಮ್ಮ ಬೇಡಿಕೆಗಳನ್ನು ಈಡೇರಿಸಬೇಕು’ ಎಂದು ಆಗ್ರಹಿಸಿದರು.

‘ತಾಲ್ಲೂಕು ಮತ್ತು ಜಿಲ್ಲಾ ಪಂಚಾಯತ್‌ ಅಧೀನದಲ್ಲಿ ಕೆಲಸ ಮಾಡುವವರಿಗೆ ಎರಡು ಅಥವಾ ಮೂರು ತಿಂಗಳಿಗೊಮ್ಮೆ ವೇತನ ಪಾವತಿಸಲಾಗುತ್ತಿದೆ. ಇದರಿಂದ ಅವರ ಜೀವನ ನಿರ್ವಹಣೆ ಕಷ್ಟವಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯನ್ನು ಆರೋಗ್ಯ ಇಲಾಖೆಯ ಜೊತೆ ವಿಲೀನಗೊಳಿಸಬೇಕೆಂಬ ಬೇಡಿಕೆ ಬಹುಕಾಲದಿಂದಲೂ ಇದೆ. ಸಚಿವ ಸುಧಾಕರ್‌ ಅವರು ಈ ಬೇಡಿಕೆ ಈಡೇರಿಸುವ ಭರವಸೆ ನೀಡಿದ್ದಾರೆ. ಆದಷ್ಟು ಬೇಗ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ADVERTISEMENT

ಕಾರ್ಯಾಧ್ಯಕ್ಷ ಬಿ.ಕೆ.ಗಿರಿಗೌಡ, ಪ್ರಧಾನ ಕಾರ್ಯದರ್ಶಿ ಎಚ್‌.ಪುಟ್ಟರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.