ADVERTISEMENT

ಆಶಾ ಕಾರ್ಯಕರ್ತೆ ಮೇಲೆ ಹಲ್ಲೆ ಯತ್ನ: ಮೂವರು ವಶಕ್ಕೆ

ಸಮೀಕ್ಷೆಗೆ ತೆರಳಿದ್ದ ಕಾರ್ಯಕರ್ತೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 2:43 IST
Last Updated 3 ಏಪ್ರಿಲ್ 2020, 2:43 IST
   

ಬೆಂಗಳೂರು: ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಭೀತಿ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಸಮೀಕ್ಷೆಗೆ ತೆರಳಿದ್ದ ಆಶಾ ಕಾರ್ಯಕರ್ತೆ, ಹೆಗಡೆ ನಗರದ ಕೃಷ್ಣವೇಣಿ ಮೇಲೆ ಸಾರಾಯಿ‌ ಪಾಳ್ಯದ ಸಾದಿಕ್ ಲೇಔಟ್‌ನಲ್ಲಿ ಹಲ್ಲೆಗೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈ ಸಂಬಂಧ ಹೆಣ್ಣೂರು ಪೊಲೀಸ್‌ ಠಾಣೆಯಲ್ಲಿ ಆರೋಗ್ಯ ನಿರೀಕ್ಷಕ ಮುನಿರಾಜು ಗುರುವಾರ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ. ಜಿಲ್ಲಾ ಆರೋಗ್ಯ ಅಧಿಕಾರಿ ಶ್ರೀನಿವಾಸ್‌ ಅವರು ಕೃಷ್ಣವೇಣಿ ಅವರನ್ನು ಠಾಣೆಗೆ ಕರೆದೊಯ್ದು ಹೇಳಿಕೆ ಕೊಡಿಸಿದ್ದಾರೆ.

ಆರೋಗ್ಯ ಕಾರ್ಯಕರ್ತರು ಹಾಗೂ ಆಶಾ ಕಾರ್ಯಕರ್ತೆಯರು 15 ದಿನಗಳಿಂದ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ ನಡೆಸುತ್ತಿದ್ದಾರೆ. ಬುಧವಾರ ಮಾಹಿತಿ ಸಂಗ್ರಹಿಸುತ್ತಿದ್ದ ಆಶಾ ಕಾರ್ಯಕರ್ತೆಯರ ವಿರುದ್ಧ ಸ್ಥಳೀಯ ಮಸೀದಿಯ ಧ್ವನಿವರ್ಧಕದಿಂದ ‘ಆರೋಗ್ಯ ಕಾರ್ಯಕರ್ತೆಯರಿಗೆ ಯಾವುದೇ ಮಾಹಿತಿ ನೀಡದೆ, ಅವರನ್ನು ಇಲ್ಲಿಂದ ಓಡಿಸಿ‘ ಎಂಬ ಸಂದೇಶ ನೀಡಲಾಗಿತ್ತು. ತಕ್ಷಣ ಸಮೀಕ್ಷೆಯಲ್ಲಿ ತೊಡಗಿದವರನ್ನು ಸುತ್ತುವರಿದ ಕೆಲವರು ಕೃಷ್ಣವೇಣಿ ಅವರ ಮೊಬೈಲ್‌ ಕಸಿದುಕೊಂಡು ಸಮೀಕ್ಷೆಯ ಕಾಗದ ಪತ್ರ ಹರಿದು ಬೆದರಿಕೆ ಒಡ್ಡಿದ್ದರು. ಈ ಬಗ್ಗೆ ಮಾಹಿತಿ ನೀಡಿದರೂ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸ್ಪಂದಿಸಿಲ್ಲ’ ಎಂದು ಆಶಾ ಕಾರ್ಯಕರ್ತೆಯರು ಆರೋಪಿಸಿದ್ದಾರೆ.

ADVERTISEMENT

ಕೃಷ್ಣವೇಣಿ ಅವರ ಮನೆಗೆ ಡಿಸಿಎಂ ಅಶ್ವತ್ಥನಾರಾಯಣ ಭೇಟಿ ನೀಡಿ ಸಾಂತ್ವನ ಹೇಳಿ, ಹಲ್ಲೆಗೆ ಯತ್ನಿಸಿದವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.