ADVERTISEMENT

ಮಾಹಿತಿಗೆ ಕಾಲಾವಕಾಶ ಕೋರಿದ ಸರ್ಕಾರ

ಹೆಬ್ಬಾಳ ಉಕ್ಕಿನ ಮೇಲ್ಸೇತುವೆ ಪ್ರಶ್ನಿಸಿದ ಪಿಐಎಲ್‌

​ಪ್ರಜಾವಾಣಿ ವಾರ್ತೆ
Published 4 ಜೂನ್ 2019, 19:35 IST
Last Updated 4 ಜೂನ್ 2019, 19:35 IST

ಬೆಂಗಳೂರು: ‘ನಗರದ ಬಸವೇಶ್ವರ ವೃತ್ತದಿಂದ ಹೆಬ್ಬಾಳ ನಡುವಿನ ಆರು ಕಿಲೋ ಮೀಟರ್‌ ಉದ್ದದ ಪ್ರಸ್ತಾವಿತ ಉಕ್ಕಿನ ಮೇಲ್ಸೇತುವೆ ನಿರ್ಮಾಣ ಯೋಜನೆ ಮುಂದುವರಿಸಲಾಗುತ್ತದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ಸೂಕ್ತ ಮಾಹಿತಿ ಪಡೆದು ತಿಳಿಸಲಾಗುವುದು’ ಎಂದು ರಾಜ್ಯ ಸರ್ಕಾರದ ಪರ ವಕೀಲರು ಹೈಕೋರ್ಟ್‌ಗೆ ತಿಳಿಸಿದರು.

ಮೇಲ್ಸೇತುವೆ ನಿರ್ಮಿಸಲು 2016ರಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕೈಗೊಂಡ ನಿರ್ಣಯ ಪ್ರಶ್ನಿಸಿ ‘ನಮ್ಮ ಬೆಂಗಳೂರು ಪ್ರತಿಷ್ಠಾನ’ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಮುಖ್ಯ ನ್ಯಾಯಮೂರ್ತಿ ಎ.ಎಸ್‌.ಓಕಾ ಹಾಗೂ ನ್ಯಾಯಮೂರ್ತಿ ಪಿ.ಎಸ್‌.ದಿನೇಶ್‌ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಮನು ಕುಲಕರ್ಣಿ, ‘ಸಕ್ಷಮ ಪ್ರಾಧಿಕಾರದ ಅನುಮತಿ ಪಡೆಯದೆ ಕಾಮಗಾರಿ ಮುಂದುವರಿಸಬಾರದು ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) 2017ರ ಮಾರ್ಚ್‌ನಲ್ಲಿ ರಾಜ್ಯ ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶಿಸಿದೆ. ಆದ್ದರಿಂದ ಈ ಯೋಜನೆಗೆ ಪರಿಸರ ಇಲಾಖೆ ಅನುಮತಿ ಕಡ್ಡಾಯ’ ಎಂದರು.

ADVERTISEMENT

ಇದಕ್ಕೆ ಪ್ರತಿಕ್ರಿಯಿಸಿದ ಸರ್ಕಾರದ ವಕೀಲರು, ‘ಯೋಜನೆಯನ್ನು ಆರಂಭಿಸಿಯೇ ಇಲ್ಲ. ಹೀಗಿರುವಾಗ ಈ ಅರ್ಜಿ
ಮಾನ್ಯತೆ ಪಡೆಯುವುದಿಲ್ಲ. ಆದಾಗ್ಯೂ ಯೋಜನೆಗೆ ಸಂಬಂಧಿಸಿದ ಮಾಹಿತಿಯನ್ನು ಸರ್ಕಾರದಿಂದ ಪಡೆದು ನ್ಯಾಯಪೀಠಕ್ಕೆ ಸಲ್ಲಿಸಲಾಗುವುದು’ ಎಂದು ತಿಳಿಸಿದರು. ವಿಚಾರಣೆಯನ್ನು ಜೂನ್‌ 7ಕ್ಕೆ ಮುಂದೂಡಲಾಗಿದೆ.

‘ಯೋಜನೆಗೆ ಸಾರ್ವಜನಿಕರಿಂದ ಸಲಹೆ ಹಾಗೂ ಆಕ್ಷೇಪಣೆ ಸ್ವೀಕರಿಸಿಲ್ಲ ಮತ್ತು ಪರಿಸರ ಇಲಾಖೆಯಿಂದ ಅನುಮತಿಯನ್ನೂ ಪಡೆದಿಲ್ಲ. ಆದ್ದರಿಂದ, ಯೋಜನೆ ಕೈಬಿಡುವಂತೆ ಸರ್ಕಾರ ಹಾಗೂ ಬಿಡಿಎಗೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.