ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಬ್ಬಾಳ ಜಂಕ್ಷನ್ ಬಳಿ ನಿರ್ಮಿಸಿರುವ 700 ಮೀಟರ್ ಉದ್ದದ ಲೂಪ್ (ಪಥ) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಉದ್ಘಾಟಿಸಿ, ಸಂಚಾರಕ್ಕೆ ಮುಕ್ತಗೊಳಿಸಿದರು.
ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತಕ್ಕೆ ಸಂಚಾರ ಸುಗಮಗೊಳಿಸಲಿದ್ದು, ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಬೆಂಗಳೂರು ಸೆಂಟ್ರಲ್ ಕಡೆಗಿನ ಪ್ರಯಾಣಕ್ಕೆ ಅನುಕೂಲ ಮಾಡಿಕೊಡಲಿದೆ.
₹80 ಕೋಟಿ ವೆಚ್ಚದ ಈ ಕಾಮಗಾರಿಯನ್ನು 31 ತಿಂಗಳಲ್ಲಿ ಪೂರ್ಣಗೊಳಿಸಲಾಗಿದೆ. ಇದರಿಂದ ಹೆಬ್ಬಾಳ ಜಂಕ್ಷನ್ನಲ್ಲಿ ಸಂಚಾರ ದಟ್ಟಣೆ ಶೇಕಡ 30ರಷ್ಟು ಕಡಿಮೆಯಾಗಲಿದೆ. ಪ್ರಾಯೋಗಿಕ ಸಂಚಾರದ ಅವಧಿಯಲ್ಲಿ ಹೆಬ್ಬಾಳದಲ್ಲಿ ಸುಗಮ ಸಂಚಾರ ಕಂಡುಬಂದಿದ್ದು, ಮೇಖ್ರಿ ವೃತ್ತದ ಕಡೆಗೆ ಕಾಯುವಿಕೆ ಅವಧಿ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಅಭಿವೃದ್ಧಿ ಯೋಜನೆಗಳು: ಕೊಡಿಗೇಹಳ್ಳಿ, ಸಹಕಾರ ನಗರ ಒಳಗೊಂಡಂತೆ ವಿಮಾನ ನಿಲ್ದಾಣ ಕಡೆಯಿಂದ ನಗರದ ಕಡೆಗೆ ಸಂಚಾರಕ್ಕೆ ಅನುಕೂಲವಾಗುಂತೆ ಮೇಲ್ಸೇತುವೆಯಲ್ಲಿ ಎರಡು ಪಥಗಳನ್ನು ನಿರ್ಮಿಸಲಾಗುತ್ತಿದೆ. ಅಲ್ಲದೇ ತುಮಕೂರು ಕಡೆಯಿಂದ ಕೆ.ಆರ್.ಪುರ ಕಡೆಗೆ ಸಂಚರಿಸಲು ಕೆಳಸೇತುವೆ ಮತ್ತು ಕೆ.ಆರ್.ಪುರ ಕಡೆಯಿಂದ ವಿಮಾನ ನಿಲ್ದಾಣ ಕಡೆಗೆ ಮೇಲ್ಸೇತುವೆ ಕಾಮಗಾರಿಯನ್ನು ಶೀಘ್ರದಲ್ಲಿಯೇ ಕೈಗೆತ್ತಿಕೊಳ್ಳಲಾಗುವುದು ಎಂದು ಬಿಡಿಎ ಅಧಿಕಾರಿಗಳು ತಿಳಿಸಿದ್ದಾರೆ.
ಈ ಕಾಮಗಾರಿಗಳು ಪೂರ್ಣಗೊಂಡರೆ ವಿಮಾನ ನಿಲ್ದಾಣದಿಂದ ತುಮಕೂರು ಕಡೆಗಿನ ಸಂಚಾರ ಬಹುತೇಕ ಸಿಗ್ನಲ್ ಮುಕ್ತವಾಗಲಿದೆ. ಪ್ರಸ್ತುತ ಮೇಖ್ರಿ ವೃತ್ತದಿಂದ ವಿಮಾನ ನಿಲ್ದಾಣ, ತುಮಕೂರು–ಕೆ.ಆರ್.ಪುರ ಮಾರ್ಗವು ಏಕಪಥವಾಗಿದ್ದು, ಇದನ್ನು ಎರಡು ಅಥವಾ ಮೂರು ಪಥವಾಗಿ ವಿಸ್ತರಿಸುವ ಅಗತ್ಯವಿದೆ. ಇದಕ್ಕಾಗಿ ತುಮಕೂರು ಕಡೆಯ ಲೂಪ್ ಅನ್ನು ಭಾಗಶಃ ಕೆಡವಿ ಮರುನಿರ್ಮಾಣ ಮಾಡಬೇಕಾಗಿದೆ ಎಂದು ಹೇಳಿದ್ದಾರೆ.
ಉದ್ಘಾಟನಾ ಸಮಾರಂಭದ ವೇಳೆ ಶಿವಕುಮಾರ್ ಅವರು ತಮ್ಮ ಕಾಲೇಜು ದಿನಗಳಲ್ಲಿ ಬಳಸುತ್ತಿದ್ದ ಯಜ್ಡಿ ಬೈಕ್ನಲ್ಲಿ ಒಂದು ಸುತ್ತು ಹಾಕಿದರು. ಇದಕ್ಕೆ ಮುಖ್ಯಮಂತ್ರಿ ಹಸಿರು ನಿಶಾನೆ ತೋರಿದ್ದು, ವಿಶೇಷವಾಗಿತ್ತು. ಅವರ ಅಭಿಮಾನಿಗಳು ಜೋರು ಚಪ್ಪಾಳೆ ತಟ್ಟಿ, ಶಿಳ್ಳೆ ಹೊಡೆದು ಸಂಭ್ರಮಿಸಿದರು.
ಶಿವಕುಮಾರ್ ಅವರು ಪದವಿ ಓದುವಾಗ ₹10,400ಕ್ಕೆ ಸಿಎಇ 7684 ಸಂಖ್ಯೆಯ ಯಜ್ಡಿ ಬೈಕ್ ಖರೀದಿಸಿದ್ದರು. ಕಾಲೇಜು ದಿನಗಳಲ್ಲಿ ಬಳಸಿದ್ದ ಈ ಬೈಕ್ ಅನ್ನು ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನವೀಕರಣ ಮಾಡಿಸಿದ್ದರು.
ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬಿ.ಡಿ.ಎ ಅಧ್ಯಕ್ಷ ಎನ್. ಎ. ಹ್ಯಾರಿಸ್, ನಟಿ ರಮ್ಯಾ, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಮಣಿವಣ್ಣನ್, ಬಿಬಿಎಂಪಿ ಮುಖ್ಯ ಆಯುಕ್ತ ಎಂ. ಮಹೇಶ್ವರರಾವ್, ಉಪ ಮುಖ್ಯಮಂತ್ರಿಯವರ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಉಪಸ್ಥಿತರಿದ್ದರು.
‘ನಗರದ ಸಂಚಾರ ದಟ್ಟಣೆ ತಪ್ಪಿಸಲು ಎಸ್ಟೀಮ್ ಮಾಲ್ನಿಂದ ಬ್ಯಾಪ್ಟಿಸ್ಟ್ ಆಸ್ಪತ್ರೆವರೆಗೆ 1.5 ಕಿಲೋ ಮೀಟರ್ ಉದ್ದದ ನೂತನ ಸುರಂಗ ರಸ್ತೆ ನಿರ್ಮಿಸಲಾಗುವುದು. ಇದರ ಸಾಧಕ- ಬಾಧಕ ಹಾಗೂ ಹಣಕಾಸಿನ ನೆರವು ಕುರಿತು ಮುಖ್ಯಮಂತ್ರಿ ಅವರ ಜತೆ ಚರ್ಚಿಸಲಾಗಿದೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.
ಕೆ.ಆರ್.ಪುರ ಕಡೆಯಿಂದ ಮೇಖ್ರಿ ಸರ್ಕಲ್ ಭಾಗದ ಲೂಪ್ ಅನ್ನು ₹80 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ. ಇನ್ನೊಂದು ಭಾಗದ ಲೂಪ್ ಅನ್ನು ನವೆಂಬರ್ ವೇಳೆಗೆ ಪೂರ್ಣಗೊಳಿಸಲಾಗುವುದು. ಒಟ್ಟು ₹300 ಕೋಟಿ ವೆಚ್ಚದಲ್ಲಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಎರಡು ಪಥಗಳು ಇರುವ ಕಡೆ ಆರು ಪಥಗಳು ಬರುವಂತೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ‘
ಈ ಲೂಪ್ ಕಾಮಗಾರಿಯನ್ನು ಮುತುವರ್ಜಿವಹಿಸಿ ಮಾಡಲಾಗಿದೆ. ಏಕೆಂದರೆ ಒಂದು ಕಡೆ ಮೆಟ್ರೊ ಮಾರ್ಗ ಇನ್ನೊಂದು ಕಡೆ ರೈಲ್ವೆ ಮಾರ್ಗವಿದ್ದು ಅತ್ಯಂತ ತಾಂತ್ರಿಕವಾಗಿ ಕಾಮಗಾರಿ ಪೂರ್ಣಗೊಳಿಸಲಾಗಿದೆ’ ಎಂದು ಎಂದರು.
‘₹17 ಸಾವಿರ ಕೋಟಿ ವೆಚ್ಚದಲ್ಲಿ 16.5 ಕಿಲೋ ಮೀಟರ್ ಉದ್ದದ ಸುರಂಗ ರಸ್ತೆಗೆ ಟೆಂಡರ್ ಕರೆಯಲಾಗಿದೆ. ಹೆಬ್ಬಾಳ ಜಂಕ್ಷನ್ನ ಮತ್ತೊಂದು ಲೂಪ್ ನಿರ್ಮಾಣವನ್ನು ತ್ವರಿತಗೊಳಿಸಲು ಬಿಡಿಎ ಅಧ್ಯಕ್ಷ ಹ್ಯಾರಿಸ್ ಅವರು ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ವಿಮಾನ ನಿಲ್ದಾಣ ಕಡೆಯಿಂದ ಬರುವವರು ಸೇರಿದಂತೆ ಎಲ್ಲರೂ ಸಂಚಾರ ದಟ್ಟಣೆ ಅನುಭವಿಸುತ್ತಾ ಇದ್ದರು. ಇದನ್ನು ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಹೆಬ್ಬಾಳ ಜಂಕ್ಷನ್ನಿಂದ ಸಿಲ್ಕ್ ಬೋರ್ಡ್ ಜಂಕ್ಷನ್ವರೆಗೆ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಏನೇನು ಕ್ರಮ ತೆಗೆದುಕೊಳ್ಳಲಾಗಿದೆ ಎಂಬುದರ ಕುರಿತು ಮುಖ್ಯಮಂತ್ರಿಯವರಿಗೆ ವಿವರಣೆ ನೀಡಿದ್ದೇನೆ’ ಎಂದು ವಿವರಿಸಿದರು.
‘ನನಗೆ ಕೆಲಸವಾಗುವುದು ಮುಖ್ಯವೇ ಹೊರತು ಹಣವಲ್ಲ. ಯುವ ಸಂಸದರೊಬ್ಬರು ನಾವು ಹಣಕ್ಕಾಗಿ ಕೆಲಸ ಮಾಡುತ್ತಿದ್ದೇವೆ ಎಂದಿದ್ದಾರೆ. ನಮಗೆ ಹಣದ ಅಗತ್ಯವಿಲ್ಲ. ಅವರ (ಬಿಜೆಪಿ) ಆಡಳಿತದ ಅವಧಿಯಲ್ಲಿ ಒಂದೇ ಒಂದು ಸಣ್ಣ ಕೆಲಸವನ್ನೂ ಮಾಡಿಲ್ಲ. ಅವರು ಒಂದೇ ಒಂದು ಕೆಲಸ ತೋರಿಸಲಿ. ಕೇಂದ್ರ ಸರ್ಕಾರದಿಂದ ಒಂದೇ ಒಂದು ರೂಪಾಯಿ ತರದಿರುವುದು ನಾಚಿಕೆಗೇಡಿನ ಸಂಗತಿ. ಬೆಂಗಳೂರು ಜಾಗತಿಕ ನಗರ ಪ್ರಧಾನಿ ಸಹ ಇದನ್ನು ಒಪ್ಪಿಕೊಂಡಿದ್ದಾರೆ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.