ಹಲ್ಲೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಹೆಗಡೆ ನಗರದಲ್ಲಿರುವ ಮದರಸಾದಲ್ಲಿ ಬಾಲಕಿಯರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಾಂಶುಪಾಲರ ಮಗನನ್ನು ಕೊತ್ತನೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ನಾಲ್ಕು ದಿನಗಳ ಹಿಂದೆ ನಡೆಸಿದ ಹಲ್ಲೆಯ ದೃಶ್ಯ ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಜಾಲತಾಣದಲ್ಲಿ ಹರಿದಾಡಿತ್ತು. ಈ ಬಗ್ಗೆ ಮಕ್ಕಳ ಪೋಷಕರು ಮದರಸಾ ಎದುರು ಜಮಾವಣೆಗೊಂಡು, ಆರೋಪಿ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.
ಘಟನೆ ಸಂಬಂಧ ಪೊಲೀಸರು ಮದರಸಾ ನಡೆಸುತ್ತಿದ್ದ ಮಾಲೀಕರ ಪುತ್ರ ಮೊಹಮ್ಮದ್ ಹಸನ್ (19) ಅವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ.
‘ಮದರಸಾದಲ್ಲಿ 200 ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅಕ್ಕಿ ಚೆಲ್ಲಾಡಿದ್ದರು ಹಾಗೂ ಹೇಳಿದ ಕೆಲಸ ಮಾಡಲಿಲ್ಲ ಎಂಬ ಕಾರಣಕ್ಕೆ ಬಾಲಕಿಯರ ಮೇಲೆ ಆರೋಪಿ ಹಲ್ಲೆ ನಡೆಸಿರುವುದು ವಿಚಾರಣೆ ವೇಳೆ ಗೊತ್ತಾಗಿದೆ. ಈ ದೃಶ್ಯಗಳು ಸಿ.ಸಿ.ಟಿ.ವಿ. ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲನೆ ನಡೆಸಲಾಗುತ್ತಿದೆ. ಅಲ್ಲದೇ ಶೌಚಾಲಯ ಕೊಠಡಿ, ಅಡುಗೆ ಕೋಣೆ ಸ್ವಚ್ಛತೆಗೂ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದರು ಎಂದು ಪೋಷಕರು ಆರೋಪಿಸಿದ್ದಾರೆ. ಈ ಬಗ್ಗೆಯೂ ವಿಚಾರಣೆ ನಡೆಯುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.