ಆರೋಪಿಗಳು
ಬೆಂಗಳೂರು: ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡರಾಮಣ್ಣ ಮತ್ತು ಚಿಕ್ಕಣ್ಣ ಬಡಾವಣೆ ಮುಖ್ಯ ರಸ್ತೆಯಲ್ಲಿ ಭಾನುವಾರ ರಾತ್ರಿ ಮಾರಕಾಸ್ತ್ರಗಳನ್ನು ಸಾರ್ವಜನಿಕರತ್ತ ಬೀಸಿ, ಹಲ್ಲೆ ನಡೆಸಿ ಪುಂಡಾಟ ಮೆರೆದಿದ್ದ ಮೂವರು ಆರೋಪಿಗಳನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಅಮೀನ್ ಷರೀಫ್ (24), ಸೈಯದ್ ಅರ್ಬಾಜ್ (20), ಸೈಯದ್ ಖಾದರ್ (21) ಬಂಧಿತರು.
ಬಂಧಿತರಿಂದ ಮಾರಕಾಸ್ತ್ರ ಜಪ್ತಿ ಮಾಡಲಾಗಿದೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ಗಳಾದ 109, 351(2), 352, 115(2), 118(1) ಹಾಗೂ ಶಸ್ತ್ರಾಸ್ತ್ರ ಕಾಯ್ದೆಯ ಸೆಕ್ಷನ್ 25–1(ಬಿ) ಅಡಿ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.
ಬಡಾವಣೆ ನಿವಾಸಿ ಕಿರಣ್ ಎಂಬುವವರು ನೀಡಿದ ದೂರು ಆಧರಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
‘ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೊ ದೃಶ್ಯಾವಳಿ ಆಧರಿಸಿ, ಮೂವರ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಇಬ್ಬರು ತಲೆಮರೆಸಿಕೊಂಡಿದ್ದು, ಅವರ ಬಂಧನಕ್ಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.
ಮಾರಕಾಸ್ತ್ರ ಹಿಡಿದು ಪುಂಡಾಟ ನಡೆಸುತ್ತಿರುವ ಬಗ್ಗೆ ಸ್ಥಳೀಯರೇ ಪೊಲೀಸರಿಗೆ ಮಾಹಿತಿ ನೀಡಿದ್ದರು. ಆ ಮಾಹಿತಿ ಆಧರಿಸಿ ಸ್ಥಳಕ್ಕೆ ಪೊಲೀಸರು ತೆರಳುವಷ್ಟರಲ್ಲಿ ಇಬ್ಬರು ಪರಾರಿ ಆಗಿದ್ದರು. ಉಳಿದ ಮೂವರನ್ನು ಸ್ಥಳೀಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ಗೊತ್ತಾಗಿದೆ.
ಹೆಣ್ಣೂರು ಭಾಗದಲ್ಲಿ ಡ್ರಗ್ಸ್ ತೆಗೆದುಕೊಂಡು ಹಾಗೂ ಮದ್ಯಪಾನ ಮಾಡಿ ರೌಡಿಗಳು ರಾತ್ರಿ ವೇಳೆ ಪುಂಡಾಟ ನಡೆಸುತ್ತಿದ್ದಾರೆ. ಕಳೆದ ವರ್ಷ ರಸ್ತೆ ಬದಿಯಲ್ಲಿ ನಿಲುಗಡೆ ಮಾಡಿದ್ದ ವಾಹನಗಳಿಗೆ ರೌಡಿಗಳು ಬೆಂಕಿಹಚ್ಚಿ ಪರಾರಿ ಆಗಿದ್ದರು. ಭಾನುವಾರ ರಾತ್ರಿ ಪೊಲೀಸರ ಭಯವಿಲ್ಲದೇ ಮಾರಕಾಸ್ತ್ರ ಹಿಡಿದು ಓಡಾಟ ನಡೆಸಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.
‘ಮನೆ ಮನೆಗೆ ಪೊಲೀಸ್ ಎನ್ನುವ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಆದರೆ, ನಾಗರಿಕರ ಸಮಸ್ಯೆ ಆಲಿಸಲು ಯಾರೂ ಮನೆಯತ್ತ ಬರುತ್ತಿಲ್ಲ’ ಎಂದು ಸ್ಥಳೀಯ ಮುಖಂಡರೊಬ್ಬರು ದೂರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.