ADVERTISEMENT

ನೀಲಮಣಿ ಎನ್‌.ರಾಜುಗೆ ತುರ್ತು ನೋಟಿಸ್‌: ಹೈಕೋರ್ಟ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2019, 20:18 IST
Last Updated 17 ಜೂನ್ 2019, 20:18 IST
ನೀಲಮಣಿ ರಾಜು
ನೀಲಮಣಿ ರಾಜು   

ಬೆಂಗಳೂರು: ‘ರಾಜ್ಯ ಪೊಲೀಸ್ ಮಹಾನಿರ್ದೇಶಕರ ಹುದ್ದೆಗೆ ನೀಲಮಣಿ ಎನ್‌.ರಾಜು ಅವರನ್ನು ನೇಮಕ ಮಾಡುವಾಗ ಸುಪ್ರೀಂ ಕೋರ್ಟ್‌ ಆದೇಶವನ್ನು ಉಲ್ಲಂಘಿಸಲಾಗಿದೆ’ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.

ಈ ಕುರಿತಂತೆ ಡಿಜಿಪಿ (ಅಗ್ನಿಶಾಮಕ ಹಾಗೂ ತುರ್ತು ಸೇವಾ ಇಲಾಖೆ) ಎಂ.ಎನ್‌.ರೆಡ್ಡಿ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಎಲ್‌.ನಾರಾಯಣ ಸ್ವಾಮಿ ಮತ್ತು ಆರ್.ದೇವದಾಸ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.

ಪ್ರತಿವಾದಿಗಳಾದ ಆಡಳಿತ ಮತ್ತು ಸಿಬ್ಬಂದಿ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ, ಯುಪಿಎಸ್‌ಸಿ ಕಾರ್ಯದರ್ಶಿ ಮತ್ತು ನೀಲಮಣಿ ಎನ್‌.ರಾಜು ಅವರಿಗೂ ನೋಟಿಸ್ ಜಾರಿಗೊಳಿಸಲು ಆದೇಶಿಸಲಾಗಿದೆ.

ADVERTISEMENT

ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿಯಲ್ಲಿ ಮಧ್ಯಂತರ ಮನವಿ ಪುರಸ್ಕರಿಸದ ಕಾರಣ ರೆಡ್ಡಿ ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿದ್ದಾರೆ. ‘ಯುಪಿಎಸ್‌ಸಿ ಸಮಿತಿ ಶಿಫಾರಸು ಮಾಡುವ ಹೆಸರನ್ನು ಡಿಜಿಪಿ ಹುದ್ದೆಗೆ ಪರಿಗಣಿಸಬೇಕು. ಈ ಕುರಿತಂತೆ ಸುಪ್ರೀಂ ಕೋರ್ಟ್‌ನ ಸ್ಪಷ್ಟ ಆದೇಶವಿದ್ದರೂ ಅದನ್ನು ಸಾರಾಸಗಟು ಉಲ್ಲಂಘಿಸಲಾಗಿದೆ‘ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.