ADVERTISEMENT

ನಂದಿಬೆಟ್ಟದಲ್ಲಿ ಪೊಲೀಸರ ಕಟ್ಟೆಚ್ಚರ, ತಪಾಸಣೆ

ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಭದ್ರತೆಯನ್ನು ಬಿಗಿಗೊಳಿಸಿದ ಪೊಲೀಸ್ ಅಧಿಕಾರಿಗಳು

​ಪ್ರಜಾವಾಣಿ ವಾರ್ತೆ
Published 17 ಆಗಸ್ಟ್ 2019, 12:32 IST
Last Updated 17 ಆಗಸ್ಟ್ 2019, 12:32 IST
ನಂದಿಬೆಟ್ಟದ ಪ್ರವೇಶದ್ವಾರದಲ್ಲಿ ಪ್ರವಾಸಿಗರ ಬ್ಯಾಗ್‌ ಪರಿಶೀಲಿಸಿದ ಕಾನ್‌ಸ್ಟೆಬಲ್‌
ನಂದಿಬೆಟ್ಟದ ಪ್ರವೇಶದ್ವಾರದಲ್ಲಿ ಪ್ರವಾಸಿಗರ ಬ್ಯಾಗ್‌ ಪರಿಶೀಲಿಸಿದ ಕಾನ್‌ಸ್ಟೆಬಲ್‌   

ಬೆಂಗಳೂರು: ‘ಕೆಲ ಶಂಕಿತರು, ದೇಶದೊಳಗೆ ದುಷ್ಕೃತ್ಯ ಎಸಗಲು ಸಂಚು ರೂಪಿಸಿದ್ದಾರೆ’ ಎಂಬ ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ಬೆನ್ನಲ್ಲೇ ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ನಂದಿಬೆಟ್ಟದಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಬೆಟ್ಟಕ್ಕೆ ತೆರಳುವ ಪ್ರವಾಸಿಗರನ್ನು ಎರಡು ಹಂತಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ.

ಗುಪ್ತಚರ ಇಲಾಖೆಯ ಎಚ್ಚರಿಕೆ ಬಳಿಕ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ತುರ್ತು ಸಂದೇಶ ಕಳುಹಿಸಿದ್ದ ಡಿಜಿಪಿ ನೀಲಮಣಿ ರಾಜು, ಎಸ್ಪಿಗಳಿಗೆ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿದ್ದರು.

ಅದರ ಬೆನ್ನಲ್ಲೇ ಎಸ್ಪಿ ಕೆ.ಸಂತೋಷ್ ಬಾಬು ಅವರು ಹಿರಿಯ ಅಧಿಕಾರಿಗಳ ಸಭೆ ನಡೆಸಿ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಅನುಮಾನಾಸ್ಪದ ವ್ಯಕ್ತಿಗಳು ಹಾಗೂ ವಸ್ತುಗಳನ್ನು ತಪಾಸಣೆ ನಡೆಸುವಂತೆ ಸೂಚನೆ ನೀಡಿದ್ದರು ಎಂದು ತಿಳಿದು ಬಂದಿದೆ.

ADVERTISEMENT

ಅದರಂತೆ ಶನಿವಾರ ನಂದಿಬೆಟ್ಟದ ಭದ್ರತಾ ಸಿಬ್ಬಂದಿ ಹೆಚ್ಚಳ ಮಾಡಿದ್ದು, ಬೆಟ್ಟದ ಕೆಳಭಾಗದಲ್ಲಿರುವ ಚೆಕ್‌ಪೋಸ್ಟ್‌ ಮತ್ತು ಬೆಟ್ಟದ ಮೇಲಿನ ಪ್ರವೇಶದ್ವಾರದಲ್ಲಿ ಪೊಲೀಸರು ಪ್ರವಾಸಿಗರನ್ನು ಮತ್ತು ವಾಹನಗಳನ್ನು ತೀವ್ರ ತಪಾಸಣೆಗೆ ಒಳಪಡಿಸಿ ಮೇಲೆ ಬಿಡುತ್ತಿದ್ದ ದೃಶ್ಯ ಕಂಡುಬಂತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.