ಬೆಂಗಳೂರು: ಎಫ್ಐಆರ್(ಪ್ರಥಮ ವರ್ತಮಾನ ವರದಿ) ಎಂದರೆ ವಿಶ್ವಕೋಶವಾಗಬೇಕಿಲ್ಲ ಎಂದು ಹೈಕೋರ್ಟ್ ಹೇಳಿದೆ. ಕೊಲೆ ಪ್ರಕರಣದ ಆರೋಪಿಯೊಬ್ಬರಿಗೆ ಜಾಮೀನು ನೀಡುವ ಸಂದರ್ಭದಲ್ಲಿ ಕೋರ್ಟ್ ಈ ಅಭಿಪ್ರಾಯಪಟ್ಟಿದೆ.
ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರ ಆರೋಪಿ ಅರ್ಜುನ್ ಎಂಬವರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
‘ಮೃತರ ಸಹೋದರಿ ನೀಡಿರುವ ಹೇಳಿಕೆಯನ್ನು ನಂಬಬಾರದು, ಏಕೆಂದರೆ ಹಲ್ಲೆ ನಡೆಸಿದವರ ಹೆಸರನ್ನು ಅವರು ಹೇಳಿಲ್ಲ’ ಎಂದು ಅರ್ಜಿದಾರರು ವಾದಿಸಿದರು.
‘ಇಬ್ಬರು ಪ್ರತ್ಯಕ್ಷದರ್ಶಿಗಳು ಪೊಲೀಸರಿಗೆ ಹೇಳಿಕೆ ನೀಡಿಲ್ಲ. ನನ್ನ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಹೀಗಾಗಿ ಜಾಮೀನು ನೀಡಬೇಕು’ ಎಂದು ಕೋರಿದರು.
ವಿಚಾರಣೆ ನಡೆಸಿ ನ್ಯಾಯಮೂರ್ತಿ ಶ್ರೀನಿವಾಸ ಹರೀಶ್ಕುಮಾರ್, ‘ಎಫ್ಐಆರ್ ನಂಬದಿರಲು ಯಾವುದೇ ಆಧಾರ ಇಲ್ಲ. ಪ್ರಕರಣದ ಕುರಿತ ಎಲ್ಲ ಮಾಹಿತಿಯನ್ನೂ ಎಫ್ಐಆರ್ ಒಳಗೊಂಡಿರಬೇಕಿಲ್ಲ. ಪ್ರತ್ಯಕ್ಷದರ್ಶಿಗಳ ಹೇಳಿಕೆಯ ಸತ್ಯಾಸತ್ಯತೆಯನ್ನು ಪರೀಕ್ಷಿಸಲು ವಿಚಾರಣೆ ನಡೆಸಲು ಇನ್ನೂ ಅವಕಾಶ ಇದೆ’ ಎಂದು ತಿಳಿಸಿ ಜಾಮೀನು ಅರ್ಜಿ ತಿರಸ್ಕರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.