ಬೆಂಗಳೂರು: ‘ನಗರ ಪೊಲೀಸರಿಗಾಗಿ ಖರೀದಿಸಿರುವ 50 ಬಾಡಿ ವೋರ್ನ್ ಕ್ಯಾಮೆರಾಗಳನ್ನು ಬಳಕೆ ಮಾಡಲು ನಿರ್ದೇಶಿಸಬೇಕು ಎಂದು ಕೋರಲಾದ ಅರ್ಜಿಗೆ ಸಂಬಂಧಿಸಿದಂತೆ ಏನೆಲ್ಲಾ ಕ್ರಮ ಕೈಗೊಂಡಿದ್ದೀರಿ ಎಂಬ ಮಾಹಿತಿನೀಡಿ’ ಎಂದು ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ.
ಈ ಕುರಿತಂತೆ ಹೈಕೋರ್ಟ್ ವಕೀಲೆ ಗೀತಾ ಮಿಶ್ರಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.
ಸರ್ಕಾರದ ಪರ ವಕೀಲರು ನ್ಯಾಯಪೀಠಕ್ಕೆ ಮಾಹಿತಿ ನೀಡಿ, ‘ಪೊಲೀಸರು ಬಾಡಿ ಕ್ಯಾಮೆರಾ ಧರಿಸುವ ವಿಚಾರಕ್ಕೆ ಸಂಬಂಧಿಸಿದಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದ್ದು, ಕಾರ್ಯಾದೇಶ ಹೊರಡಿಸಲಾಗಿದೆ. ಇದಕ್ಕೆ ಸಂಬಂಧಿಸಿದ ವಿವರ ಸಲ್ಲಿಸಲು ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಈ ಕುರಿತಂತೆ ಕೈಗೊಂಡಿರುವ ಕ್ರಮಗಳ ವಿವರ ಸಲ್ಲಿಸಿ’ ಎಂದು ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.
ಏನಿದು ಅರ್ಜಿ?:‘ಬಾಡಿ ಕ್ಯಾಮೆರಾ ಧರಿಸುವುದರಿಂದ ಪೊಲೀಸರಿಗೆ ರಕ್ಷಣೆ ಸಿಗಲಿದೆ. ಸಿಬ್ಬಂದಿಯ ಕರ್ತವ್ಯ ನಿರ್ವಹಣೆಯನ್ನು ಪೊಲೀಸ್ ಠಾಣೆಯಿಂದಲೇ ಹಿರಿಯ ಅಧಿಕಾರಿಗಳು ಗಮನಿಸಿ ಮೇಲ್ವಿಚಾರಣೆ ನಡೆಸಬಹುದು. ತಪ್ಪಿತಸ್ಥರಿಗೂ ಭಯ ಹುಟ್ಟಿಸುತ್ತದೆ ಪೊಲೀಸ್ ಸಿಬ್ಬಂದಿ ಮಾಡುವ ಭ್ರಷ್ಟಾಚಾರಕ್ಕೂ ಕಡಿವಾಣ ಹಾಕಬಹುದು’ ಎಂಬುದು ಅರ್ಜಿದಾರರ ಪ್ರತಿಪಾದನೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.