ಬೆಂಗಳೂರು: ‘ನಗರದ ರಾಜರಾಜೇಶ್ವರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯನ್ನು (ಆರ್ಆರ್ಎಂಸಿಎಚ್) ಚೆನ್ನೈನ ಡೀಮ್ಡ್ ವಿಶ್ವವಿದ್ಯಾಲಯದ ಎಂಜಿಆರ್ ಶೈಕ್ಷಣಿಕ ಮತ್ತು ಸಂಶೋಧನಾ ಕೇಂದ್ರಕ್ಕೆ ವರ್ಗಾಯಿಸುವ ಕುರಿತು ಎರಡು ತಿಂಗಳಲ್ಲಿ ಹೊಸ ನಿರ್ಧಾರ ಕೈಗೊಳ್ಳಿ’ ಎಂದು ವಿಶ್ವವಿದ್ಯಾಲಯಗಳ ಅನುದಾನ ಆಯೋಗಕ್ಕೆ (ಯುಜಿಸಿ) ಹೈಕೋರ್ಟ್ ಆದೇಶಿಸಿದೆ.
ಈ ಸಂಬಂಧ ಸಲ್ಲಿಸಲಾಗಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಅಲೋಕ್ ಅರಾಧೆ ಮತ್ತು ನ್ಯಾಯಮೂರ್ತಿ ಅನಂತ ರಾಮನಾಥ ಹೆಗಡೆ ಅವರಿದ್ದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿ,ಆರ್ಆರ್ಎಂಸಿಎಚ್ ಅನ್ನು ನಡೆಸುತ್ತಿರುವ ಮೂಗಾಂಬಿಗೈ ಚಾರಿಟಬಲ್ ಮತ್ತು ಎಜುಕೇಷನಲ್ ಟ್ರಸ್ಟ್ ಸಲ್ಲಿಸಿದ್ದ ಮೇಲ್ಮನವಿಯನ್ನು ವಿಲೇವಾರಿ ಮಾಡಿದೆ.
‘ನಿಯಮದ ಅನುಸಾರ ಯುಜಿಸಿ ರಾಜ್ಯ ಸರ್ಕಾರದ ಅಭಿಪ್ರಾಯವನ್ನು ಪಡೆದ ನಂತರ ತೀರ್ಮಾನ ಕೈಗೊಳ್ಳಬೇಕಿತ್ತು. ಆದರೆ, ಆ ರೀತಿ ನಡೆದುಕೊಳ್ಳದೆ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಆದ್ದರಿಂದ,ಕೇಂದ್ರ ಸರ್ಕಾರ ಮತ್ತು ಯುಜಿಸಿ, ಈ ವಿಚಾರದಲ್ಲಿ ರಾಜ್ಯ ಸರ್ಕಾರದ ಅಭಿಪ್ರಾಯಗಳನ್ನು ಪರಿಗಣಿಸಿದ ನಂತರ ಎರಡು ತಿಂಗಳ ಒಳಗಾಗಿ ಹೊಸ ನಿರ್ಧಾರ ಕೈಗೊಳ್ಳಬೇಕು’ ಎಂದು ನಿರ್ದೇಶಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.