ADVERTISEMENT

ಜಾಹೀರಾತು ನಿಷೇಧ: ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಮಧ್ಯಂತರ ತಡೆ

​ಪ್ರಜಾವಾಣಿ ವಾರ್ತೆ
Published 7 ಫೆಬ್ರುವರಿ 2019, 9:58 IST
Last Updated 7 ಫೆಬ್ರುವರಿ 2019, 9:58 IST
   

ಬೆಂಗಳೂರು: ಒಂದು ವರ್ಷ ಕಾಲ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಎಲ್ಲ ಮಾದರಿಯ ಜಾಹೀರಾತು ಫಲಕಗಳ ಅಳವಡಿಕೆ ನಿಷೇಧಕ್ಕೆ ಸಂಬಂಧಿಸಿದಂತೆ 2018ರ ಆಗಸ್ಟ್ 6ರಂದು ಬಿಬಿಎಂಪಿ ಕೈಗೊಂಡಿರುವ ನಿರ್ಣಯವನ್ನು ನಿನ್ನೆಯಷ್ಟೇ ರದ್ದುಪಡಿಸಿದ್ದ ಏಕಸದಸ್ಯ ನ್ಯಾಯಪೀಠದ ಆದೇಶಕ್ಕೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ತಡೆ ನೀಡಿದೆ.

ಈ ಕುರಿತಂತೆ ಬಿಬಿಎಂಪಿ ಸಲ್ಲಿಸಿರುವ ಮೇಲ್ಮನವಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಎಲ್.ನಾರಾಯಣ ಸ್ವಾಮಿ ಹಾಗೂ ಪಿ.ಎಸ್.ದಿನೇಶ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ಬಿಬಿಎಂಪಿ ಪರ ವಾದ ಮಂಡಿಸಿದ ಹಿರಿಯ ವಕೀಲ ಡಿ.ಎಂ.ನಂಜುಂಡರೆಡ್ಡಿ, ಏಕಸದಸ್ಯ ನ್ಯಾಯಪೀಠ ಬುಧವಾರ (ಫೆ.6)ನೀಡಿರುವ ಆದೇಶ ಕಾನೂನು ಬಾಹಿರವಾಗಿದೆ. ಆದ್ದರಿಂದ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದರು.

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ನ್ಯಾಯಮೂರ್ತಿ ಎಸ್‌.ಸುನಿಲ್ ದತ್ ಯಾದವ್ ಅವರ ಆದೇಶಕ್ಕೆ ಮಧ್ಯಂತರ ತಡೆ ನೀಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.