ADVERTISEMENT

ಗಾಣಿಗ ಗುರುಪೀಠ: ಹೈಕೋರ್ಟ್‌ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 14 ನವೆಂಬರ್ 2022, 20:59 IST
Last Updated 14 ನವೆಂಬರ್ 2022, 20:59 IST

ಬೆಂಗಳೂರು: ‘ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಗಾಣಿಗ ಜನಾಂಗದ ಗುರುಪೀಠಕ್ಕೆ ಸರ್ಕಾರದಿಂದ ₹ 5 ಕೋಟಿ ಅನುದಾನ ನೀಡಿದ ಮತ್ತು ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್‌ಗೆ ಹತ್ತು ಎಕರೆ ಜಮೀನು ಮಂಜೂರು ಮಾಡಿದ ಕ್ರಮವನ್ನು ಪ್ರಶ್ನಿಸಿದ ಅರ್ಜಿಗೆ ಸಂಬಂಧಿಸಿದಂತೆ 3 ವಾರಗಳ ಒಳಗೆ ಆಕ್ಷೇಪಣೆ ಸಲ್ಲಿಸಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿ, ಪ್ರತಿವಾದಿ ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸುವಂತೆ ಆದೇಶಿಸಿವಿಚಾರಣೆಯನ್ನು ಡಿ. 7ಕ್ಕೆ ಮುಂದೂಡಿದೆ.ಯಡಿಯೂರಪ್ಪ 2011ರ ಫೆಬ್ರುವರಿಯಲ್ಲಿ ಮಂಡಿಸಿದ್ದ ಬಜೆಟ್‌ನಲ್ಲಿ ಗಾಣಿಗ ಜನಾಂಗದ ಗುರುಪೀಠಕ್ಕೆ ₹ 5 ಕೋಟಿ ಮೀಸಲಿರಿಸಿದ್ದರು.

ವಿಧಾನಪರಿಷತ್ ಮಾಜಿ ಸದಸ್ಯ ಬಿ.ಜೆ ಪುಟ್ಟಸ್ವಾಮಿ, ವಿಶ್ವ ಗಾಣಿಗರ ಸಮುದಾಯ ಟ್ರಸ್ಟ್ ನೋಂದಣಿ ಮಾಡಿಸಿ ಅದಕ್ಕೆ ಅಧ್ಯಕ್ಷರಾಗಿದ್ದರು. ಟ್ರಸ್ಟ್‌ಗೆ ಶೈಕ್ಷಣಿಕ ಉದ್ದೇಶಕ್ಕೆ ದಾಸನಪುರ ಬಳಿ 10 ಎಕರೆ ಗೋಮಾಳ ಜಮೀನನ್ನು ಮಂಜೂರು ಮಾಡಲಾಗಿತ್ತು. ‘ಟ್ರಸ್ಟ್ ಶಿಕ್ಷಣ ಸಂಸ್ಥೆ ಹೊಂದಿರದಿದ್ದರೂ ಜಮೀನು ಮಂಜೂರಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆಗೆ ಆದೇಶಿಸಬೇಕು‘ ಎಂದು ಕೋರಿಮಾಹಿತಿ ಹಕ್ಕು ಕಾರ್ಯಕರ್ತ ಎನ್. ಹನುಮೇಗೌಡ ಪಿಐಎಲ್ ಸಲ್ಲಿಸಿದ್ದರು. ನ್ಯಾಯಪೀಠವು ಇದನ್ನು ಸ್ವಯಂಪ್ರೇರಿತ ಪಿಐಎಲ್ ಆಗಿ ಪರಿವರ್ತಿಸಿಕೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.