ಬೆಂಗಳೂರು: ‘ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಾರ್ಡ್ ಪುನರ್ ರಚನೆ ಪ್ರಕ್ರಿಯೆಯಲ್ಲಿ ಗಂಭೀರ ಸಮಸ್ಯೆಗಳು ಇದ್ದರೆ ಮಾತ್ರವೇ ಮಧ್ಯ ಪ್ರವೇಶಿಸಲಾಗುವುದು’ ಎಂಬ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್, ಇದೇ 21ರಂದು ಎಲ್ಲ ಅರ್ಜಿಗಳ ಮೇಲಿನ ತನ್ನ ಆದೇಶ ಪ್ರಕಟಿಸುವುದಾಗಿ ತಿಳಿಸಿದೆ.
ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್ ಮರು ವಿಂಗಡಣೆ ಪ್ರಶ್ನಿಸಿ ಶಾಸಕರಾದ ಸೌಮ್ಯಾ ರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ.ಸತೀಶ್ ರೆಡ್ಡಿ ಸೇರಿ 14 ಜನರು ಸಲ್ಲಿಸಿರುವ ಅರ್ಜಿಗಳನ್ನು ನ್ಯಾಯಮೂರ್ತಿ ಹೇಮಂತ ಚಂದನ ಗೌಡರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರು ಮತ್ತು ಸರ್ಕಾರದ ಪರ ವಕೀಲರ ಸುದೀರ್ಘ ವಾದ ಆಲಿಸಿದ ನ್ಯಾಯಪೀಠ, ‘ಎಲ್ಲಾ ವಾರ್ಡ್ಗಳನ್ನು ಸಮಾನವಾಗಿ ವಿಂಗಡಿಸುವುದು ಕಷ್ಟಸಾಧ್ಯ. ಇಂತಹ ಪರಿಸ್ಥಿತಿಯಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಉದ್ಭವಿಸುವುದು ಸಹಜ’ ಎಂದು ಹೇಳಿತು.
‘ವಾರ್ಡ್ ಪುನರ್ ವಿಂಗಡಣೆ ವೇಳೆ ಎಲ್ಲಾ ವಾರ್ಡ್ಗಳಲ್ಲಿ ಸಮಾನ ಜನಸಂಖ್ಯೆ ಇರಬೇಕು ಎಂಬುದನ್ನು ಪ್ರತಿಪಾದಿಸುವ ನಿರ್ದಿಷ್ಟ ತೀರ್ಪುಗಳಿದ್ದರೆ ಸಲ್ಲಿಸಿ’ ಎಂದುಅರ್ಜಿದಾರರ ಪರ ವಕೀಲರಿಗೆ ಸೂಚಿಸಿದ ನ್ಯಾಯಪೀಠ,ವಿಚಾರಣೆಯನ್ನು ಇದೇ 16ಕ್ಕೆ ಮುಂದೂಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.