ADVERTISEMENT

ರಸ್ತೆಗುಂಡಿ ಭರ್ತಿ: ಸಮಗ್ರ ವರದಿ ಸಲ್ಲಿಕೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2023, 21:34 IST
Last Updated 9 ಫೆಬ್ರುವರಿ 2023, 21:34 IST
   

ಬೆಂಗಳೂರು: ‘ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿನ ರಸ್ತೆ ಗುಂಡಿಗಳನ್ನು ಮುಚ್ಚಿರುವ ಕಾಮಗಾರಿಗೆ ಸಂಬಂಧಿ ಸಿದಂತೆ ಸಂಗ್ರಹಿಸಲಾದ ಯಾದೃಚ್ಛಿಕ ಮಾದರಿಗಳನ್ನು (ರ‌್ಯಾಂಡಮ್‌ ಸ್ಯಾಂಪಲ್) ಪ್ರಯೋಗಾಲಯಕ್ಕೆ ರವಾನಿಸಲಾಗಿದೆ. ಫಲಿತಾಂಶ ನಿರೀಕ್ಷಿಸಲಾಗುತ್ತಿದ್ದು, ಈ ಕುರಿತ ವರದಿ ಸಲ್ಲಿಕೆಗೆ ಇನ್ನಷ್ಟು ಕಾಲಾವಕಾಶ ಬೇಕು‘ ಎಂಬ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ (ಎನ್‌ಎಚ್‌ಎಐ) ಮನವಿಯನ್ನು ಹೈಕೋರ್ಟ್‌ ಮನ್ನಿಸಿದೆ.

ರಸ್ತೆ ಗುಂಡಿಗಳ ಭರ್ತಿಗೆ ಸಂಬಂಧಿಸಿದಂತೆ ಕೋರಮಂಗಲದ ವಿಜಯನ್ ಮೆನನ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ. ವರಾಳೆ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಎನ್‌ಎಚ್‌ಎಐ ಪರ ಹಾಜರಾಗಿದ್ದ ಡೆಪ್ಯೂಟಿ ಸಾಲಿಸಿಟರ್‌ ಜನರಲ್‌ ಎಚ್‌. ಶಾಂತಿಭೂಷಣ್, ‘ಬಿಬಿಎಂಪಿ ವ್ಯಾಪ್ತಿಯ ಎಂಟು ವಲಯಗಳಲ್ಲಿ ಈಗಾಗಲೇ ನಾಲ್ಕು ವಲಯಗಳಾದ ಬೊಮ್ಮನಹಳ್ಳಿ, ಯಲಹಂಕ, ಪಶ್ಚಿಮ ವಲಯ ಮತ್ತು ದಕ್ಷಿಣ ವಲಯಗಳಲ್ಲಿ ಮುಚ್ಚಲಾದ ರಸ್ತೆ ಗುಂಡಿ ಕಾಮಗಾರಿ ಮಾದರಿಯನ್ನು ತಪಾಸಣೆಗಾಗಿ ಉಪವಿಭಾಗೀಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ವರದಿ ಇನ್ನಷ್ಟೇ ಬರಬೇಕಿದ್ದು, ಅದನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಹತ್ತು ವಾರಗಳ ಕಾಲಾವಕಾಶ ನೀಡಬೇಕು’ ಎಂದು ಮನವಿ ಮಾಡಿದರು.

ADVERTISEMENT

ಏತನ್ಮಧ್ಯೆ ಬಿಬಿಎಂಪಿ ಪರ ವಕೀಲ ವಿ. ಶ್ರೀನಿಧಿ, ‘ಬೆಂಗಳೂರಿನಲ್ಲಿ ರಸ್ತೆಗಳ ವಿಸ್ತರಣೆ ಕಾರ್ಯ ಅತ್ಯಂತ ವೇಗವಾಗಿ ನಡೆಯುತ್ತಿದ್ದು, ಇದನ್ನೂ ಎನ್‌ಎಚ್‌ಎಐ ಪರಿಶೀಲಿಸಬಹುದು’ ಎಂಬ ಸಲಹೆ ನೀಡಿದರು.

ಸಲಹೆ ಆಲಿಸಿ ಮತ್ತು ಪ್ರಮಾಣಪತ್ರ ದಾಖಲಿಸಿಕೊಂಡ ನ್ಯಾಯಪೀಠವು ಸಮಗ್ರ ವರದಿ ಸಲ್ಲಿಕೆಗೆ ಎಂಟು ವಾರಗಳ ಕಾಲಾವಕಾಶ ನೀಡಿ ವಿಚಾರಣೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.