ಬೆಂಗಳೂರು: ಬಿಟ್ ಕಾಯಿನ್ ಖರೀದಿ ವ್ಯವಹಾರಕ್ಕೆ ಸಂಬಂಧಿಸಿದಂತೆ ನಗರದ ನಿವಾಸಿಯೊಬ್ಬರಿಗೆ ₹75 ಲಕ್ಷ ವಂಚಿಸಿದ ಆರೋಪ ಪ್ರಕರಣದಲ್ಲಿ ಬಿಹಾರದ ಶಂತನು ಸಿನ್ಹಾ ಎಂಬುವರಿಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧ ದೂರುದಾರ ನಾಗಸಂದ್ರದ ಟಿ.ವೆಂಕಟೇಶಮೂರ್ತಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆ ನಡೆಸಿ ಈ ಕುರಿತಂತೆ ಆದೇಶಿಸಿದೆ.
‘ಬಿಟ್ ಕಾಯಿನ್ ವ್ಯವಹಾರದಲ್ಲಿ 2,500ಕ್ಕೂ ಹೆಚ್ಚು ಜನ ಹಣ ಹೂಡಿಕೆ ಮಾಡಿದ್ದು, ಸುಮಾರು ₹1,500 ಕೋಟಿ ವಂಚನೆಯಾಗಿದೆ. ಆ ಮೂಲಕ ದೇಶದಲ್ಲಿ ಅರ್ಥಿಕ ಅಪರಾಧ ಎಸಗಲಾಗಿದೆ. ಈ ಪ್ರಕರಣದಲ್ಲಿ ಶಂತನು ಸಿನ್ಹಾ ಸಂಬಂಧ ಹೊಂದಿದ್ದಾರೆ’ ಎಂದು ವೆಂಕಟೇಶಮೂರ್ತಿ ದೂರು ಸಲ್ಲಿಸಿದ್ದರು. ಈ ದೂರಿನ ಅನುಸಾರ ಸಿಐಡಿ ಸೈಬರ್ ಅಪರಾಧ ಠಾಣೆ ಪೊಲೀಸರು ಶಂತನು ಸಿನ್ಹಾ ಅವರನ್ನು ಬಂಧಿಸಿದ್ದರು.
ನೆಲಮಂಗಲದ 1ನೇ ಹೆಚ್ಚವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯ ಆರೋಪಿಗೆ ಜಾಮೀನು ನೀಡಿ 2021ರ ಮೇ 5ರಂದು ಆದೇಶಿಸಿತ್ತು. ಈ ಆದೇಶ ರದ್ದುಪಡಿಸಬೇಕು ಎಂದು ಕೋರಿದ್ದ ದೂರುದಾರರ ಅರ್ಜಿಯನ್ನು ಈಗ ಹೈಕೋರ್ಟ್ ವಜಾಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.