ADVERTISEMENT

ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಖುದ್ದು ಹಾಜರಿಗೆ ಆದೇಶ

​ಪ್ರಜಾವಾಣಿ ವಾರ್ತೆ
Published 17 ಜನವರಿ 2022, 19:30 IST
Last Updated 17 ಜನವರಿ 2022, 19:30 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ‘ಸೂಕ್ತ ನಿರ್ದೇಶನ ನೀಡಿದ್ದರೂ ಅಮೃತ ಮಹಲ್ ಕಾವಲ್ ಜಮೀನು ಒತ್ತುವರಿ ತೆರವಿಗೆ ನೀವು ಸೂಕ್ತ ಕ್ರಮ ಕೈಗೊಂಡಿಲ್ಲ. ಹಾಗಾಗಿ ಫೆಬ್ರುವರಿ 8ರಂದು ವಿಚಾರಣೆಗೆ ಖುದ್ದು ಹಾಜರಾಗಿ ವಿವರಣೆ ನೀಡಿ’ ಎಂದು ಅರಣ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಪಶುಸಂಗೋಪನಾ ಇಲಾಖೆಯ ಅಮೃತ ಕಾವಲ್ ಜಾನುವಾರು ಕೇಂದ್ರದ ಉಪ ನಿರ್ದೇಶಕರಿಗೆ ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ‘ವೈಲ್ಡ್ ಲೈಫ್ ಕನ್ಸರ್ವೇಷನ್ ಆ್ಯಕ್ಷನ್‌ ಟೀಂ’ ಪ್ರತಿನಿಧಿ ಶ್ರೀದೇವ್ ಹುಲಿಕೆರೆ ಸೇರಿದಂತೆ ನಾಲ್ವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ, ‘ನ್ಯಾಯಾಲಯದ ಆದೇಶಕ್ಕೆ ತ್ವದ್ವಿರುದ್ಧವಾಗಿ ಪ್ರಮಾಣಪತ್ರ ಸಲ್ಲಿಸಿದ್ದೀರಿ’ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

‘ಚಿಕ್ಕಮಗಳೂರು ಜಿಲ್ಲೆಯ ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಅಮೃತ ಕಾವಲ್ ಜಮೀನು ಒತ್ತುವರಿಯಾಗಿರುವ ಬಗ್ಗೆ ಪರಿಶೀಲನೆ ನಡೆಸಿ ತೆರವು ಕಾರ್ಯಚರಣೆ ಕೈಗೊಳ್ಳಬೇಕು. ಒತ್ತುವರಿ ತೆರವಿಗೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ ಎಂಬ ಬಗ್ಗೆ ವಿವರಣೆ ನೀಡಿ ಪ್ರಮಾಣಪತ್ರ ಸಲ್ಲಿಸಬೇಕು’ ಎಂದು ಹೈಕೋರ್ಟ್‌, ಅರಣ್ಯ ಇಲಾಖೆ ಪ್ರಧಾನ ಕಾಯದರ್ಶಿಗೆ 2018ರ ಡಿಸೆಂಬರ್ 2ರಂದು ನಿರ್ದೇಶಿಸಿತ್ತು.

ADVERTISEMENT

‘ಚಿಕ್ಕಮಗಳೂರಿನ ಸಂರಕ್ಷಿತ ಮೀಸಲು ಅರಣ್ಯ ಪ್ರದೇಶ ಮತ್ತು ಅಮೃತ ಮಹಲ್ ಕಾವಲ್ ಜಮೀನು ಒತ್ತುವರಿ ತೆರವುಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು’ ಎಂಬುದು ಅರ್ಜಿದಾರರ ಕೋರಿಕೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.