ADVERTISEMENT

ಮಕ್ಕಳ ಸಮೀಕ್ಷೆ: ಸಭೆ ನಡೆಸಲು ನಿರ್ದೇಶನ

​ಪ್ರಜಾವಾಣಿ ವಾರ್ತೆ
Published 23 ಜೂನ್ 2021, 20:37 IST
Last Updated 23 ಜೂನ್ 2021, 20:37 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ಶಾಲೆಯಿಂದ ಹೊರಗುಳಿದ ಮಕ್ಕಳ ಬಗ್ಗೆ ಸಮೀಕ್ಷೆ ನಡೆಸಲಾಗಿದೆಯೇ ಎಂಬುದನ್ನು ಖಚಿಪಡಿಸಿಕೊಳ್ಳಲು ಅಮಿಕಸ್ ಕ್ಯೂರಿ ಸೇರಿದಂತೆ ಎಲ್ಲಾ ಸಹಭಾಗಿ ಸಂಸ್ಥೆಗಳ ಸಭೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಆರ್‌ಟಿಇ ಕಾಯ್ದೆ ಸಮಪರ್ಕ ಅನುಷ್ಠಾನದ ಕುರಿತು ಸ್ವಯಂ ಪ್ರೇರಿತ ಅರ್ಜಿ ದಾಖಲಿಸಿಕೊಂಡು ವಿಚಾರಣೆ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಈ ಆದೇಶ ನೀಡಿತು.

‘ಬಿಬಿಎಂಪಿ ಮುಖ್ಯ ಆಯುಕ್ತರು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನೀಡಿರುವ ಪತ್ರವನ್ನು ಗಮನಿಸಿದರೆ ಸಮೀಕ್ಷೆಯ ಉದ್ದೇಶವನ್ನು ಪಾಲಿಕೆ ಇನ್ನೂ ಅರ್ಥ ಮಾಡಿಕೊಂಡಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

ADVERTISEMENT

‘ಸಭೆ ನಡೆಸದಿದ್ದರೆ, ಸಮೀಕ್ಷೆ ಕಾರ್ಯವನ್ನು ಬಿಬಿಎಂಪಿ ನಡೆಸಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಲು ನಗರಾಭಿವೃದ್ಧಿ ಇಲಾಖೆಗೆ ನಿರ್ದೇಶನ ನೀಡಲು ಮುಂದಾಗಬೇಕಾಗುತ್ತದೆ’ ಎಂದು ಪೀಠ ತಿಳಿಸಿತು.

ರಾಜ್ಯ ಸರ್ಕಾರ ಅಥವಾ ಯಾವುದೇ ಸ್ಥಳೀಯ ಪ್ರಾಧಿಕಾರ ನಡೆಸುತ್ತಿರುವ ಸಮೀಕ್ಷೆಯಲ್ಲಿ ದೋಷಗಳು ಕಂಡು ಬಂದರೆ ಮೆಮೊ ಸಲ್ಲಿಸಲು ಅಮಿಕಸ್ ಕ್ಯೂರಿ ಅವರಿಗೆ ಪೀಠ ಅನುಮತಿ ನೀಡಿತು. ವಿಚಾರಣೆಯನ್ನು ಜುಲೈ 19ಕ್ಕೆ ಮುಂದೂಡಿತು.

ಆರ್‌ಟಿಇ ನಿಯಮ 6ನೇ ನಿಯಮದ ಪ್ರಕಾರ ಸ್ಥಳೀಯ ಪ್ರಾಧಿಕಾರಗಳು ತಮ್ಮ ವ್ಯಾಪ್ತಿಯಲ್ಲಿ ಸಮೀಕ್ಷೆ ನಡೆಸುವ ಮೂಲಕ ಎಲ್ಲಾ ಮಕ್ಕಳ ಮಾಹಿತಿ ಸಂಗ್ರಹಿಸಿ ನಿರ್ವಹಿಸಬೇಕು. ಅದರಂತೆ 2020ರ ಏಪ್ರಿಲ್‌ 30ರೊಳಗೆ ಸಮೀಕ್ಷೆ ಪೂರ್ಣಗೊಳಿಸುವಂತೆ ಈ ಹಿಂದೆ ಪೀಠ ಮಧ್ಯಂತರ ಆದೇಶ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.