ಕರ್ನಾಟಕ ಹೈಕೋರ್ಟ್
ಬೆಂಗಳೂರು: ‘ಯಾವುದೇ ಪ್ರಕರಣದಲ್ಲಿ ಸರ್ಕಾರಿ ವಕೀಲರು ಕೋರಿದ ಮಾಹಿತಿಯನ್ನು ನೀಡದ ಅಥವಾ ಮಾಹಿತಿ ನೀಡಲು ವಿಳಂಬ ಧೋರಣೆ ತೋರುವ ಸರ್ಕಾರಿ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಿ ಸೇವೆಯಿಂದ ವಜಾಗೊಳಿಸಲು ಆದೇಶಿಸಲಾಗುವುದು’ ಎಂದು ಹೈಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.
ಚಿತ್ರದುರ್ಗದ ಹಿರಿಯ ನಾಗರಿಕ ವಿಶ್ವನಾಥನ್ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಕುರಿತಂತೆ ಎಚ್ಚರಿಕೆ ನೀಡಿದೆ.
ನಿವೃತ್ತ ಸರ್ಕಾರಿ ಉದ್ಯೋಗಿಯಾಗಿರುವ ಅರ್ಜಿದಾರರು, ಹಿರಿಯ ನಾಗರಿಕರು ಮತ್ತು ಪೋಷಕರ ಕಲ್ಯಾಣ ಕಾಯ್ದೆ ಅಡಿ ಪರಿಹಾರ ಕೋರಿ ಚಿತ್ರದುರ್ಗದ ಉಪ ವಿಭಾಗಾಧಿಕಾರಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮುಂದುವರಿದ ಭಾಗವಾಗಿ ಹೈಕೋರ್ಟ್ ಕದ ತಟ್ಟಿದ್ದಾರೆ.
ಪ್ರಕರಣದಲ್ಲಿ ಹೈಕೋರ್ಟ್ ಈ ಹಿಂದಿನ ವಿಚಾರಣೆ ವೇಳೆ ಚಿತ್ರದುರ್ಗದ ತಹಶೀಲ್ದಾರ್ಗೆ ₹50 ಸಾವಿರ ದಂಡ ಸಹಿತ ವಾರೆಂಟ್ ಜಾರಿಗೊಳಿಸಿತ್ತು. ಡಿಸೆಂಬರ್ 16ರಂದು ವಿಚಾರಣೆಗೆ ಖುದ್ದು ಹಾಜರಿರುವಂತೆಯೂ ನಿರ್ದೇಶಿಸಿತ್ತು.
ಈ ಆದೇಶದ ಅನ್ವಯ ತಹಶೀಲ್ದಾರ್ ಮಂಗಳವಾರ ವಿಚಾರಣೆಗೆ ಖುದ್ದು ಹಾಜರಾಗಿದ್ದರು. ವಿಚಾರಣೆ ವೇಳೆ ನ್ಯಾಯಪೀಠ ಸರ್ಕಾರಿ ವಕೀಲರಿಗೆ ಮಾಹಿತಿ ನೀಡುವಲ್ಲಿ ನಿರ್ಲಕ್ಷ್ಯ ತೋರಲಾಗಿದೆ ಎಂಬ ಆಕ್ಷೇಪಕ್ಕೆ ಸಂಬಂಧಿಸಿದಂತೆ ಸರ್ಕಾರಿ ಅಧಿಕಾರಿಗಳಿಗೆ ಈ ಎಚ್ಚರಿಕೆ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.