ಬೆಂಗಳೂರು: ‘ಹೂಡಿಕೆದಾರರಿಗೆ ವಂಚನೆ ಎಸಗಿದ ಆರೋಪ ಎದುರಿಸುತ್ತಿರುವ ಆ್ಯಂಬಿಡೆಂಟ್ ಕಂಪನಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು’ ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಆದೇಶಿಸಿದೆ.
ಈ ಕುರಿತಂತೆ ‘ಲಂಚಮುಕ್ತ ಕರ್ನಾಟಕ ನಿರ್ಮಾಣ ವೇದಿಕೆ’ಯ ಅಧ್ಯಕ್ಷ ರವಿಕೃಷ್ಣಾ ರೆಡ್ಡಿ ಸಲ್ಲಿಸಿರುವ ಅರ್ಜಿಯನ್ನು ರಜಾಕಾಲದ ವಿಭಾಗೀಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಚ್.ಟಿ.ನರೇಂದ್ರ ಪ್ರಸಾದ್ ಹಾಗೂ ನ್ಯಾಯಮೂರ್ತಿ ಅಶೋಕ್ ಎಸ್.ಕಿಣಗಿ ಮಂಗಳವಾರ ವಿಚಾರಣೆ ನಡೆಸಿದರು.
ಆರೋಪವೇನು?: ‘ಆ್ಯಂಬಿಡೆಂಟ್ ಕಂಪನಿ, ಇಂಜಾಝ್ ಮತ್ತು ಸಂಚಯ ಕಂಪನಿ ಹೂಡಿಕೆದಾರರಿಗೆ ವಂಚಿಸಿದ್ದು, ಈ ಪ್ರಕರಣದಲ್ಲಿ ಯಾರ ವಿರುದ್ಧವೂ ಈತನಕ ಕ್ರಮ ಜರುಗಿಸಿಲ್ಲ. ಆದ್ದರಿಂದ ಟೆಲಿಫೋನ್ ಕದ್ದಾಲಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿರುವ ರೀತಿಯಲ್ಲೇ ಈ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.
‘ಆ್ಯಂಬಿಡೆಂಟ್ನ ಮುಖ್ಯಸ್ಥ ಸೈಯದ್ ಫರೀದ್ ಅಹಮದ್, ಆ್ಯಂಬಿಡೆಂಟ್ ಜೊತೆ ವ್ಯವಹರಿಸಿರುವ ಸಂಚಯ ಕಂಪನಿಯ ಮುಖ್ಯಸ್ಥ ವಿಜಯ್ ಟಾಟಾ ಸೇರಿದಂತೆ ಈ ಪ್ರಕರಣದಲ್ಲಿ ಮಾಜಿ ಮಂತ್ರಿಗಳು, ಶಾಸಕರು ಹಾಗೂ ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ’ ಎಂಬುದು ಅರ್ಜಿದಾರರ ಆರೋಪ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.