ಯಲಹಂಕ: ಮಕ್ಕಳ ಭವಿಷ್ಯ ಉತ್ತಮವಾಗಿರಬೇಕು; ಅವರಿಗೆ ಯಶಸ್ಸು ಲಭ್ಯವಾಗಬೇಕೆಂದರೆ ಶಿಕ್ಷಣವೊದೇ ಸೂತ್ರ. ಹೀಗಾಗಿ ಎಲ್ಲಾ ಪೋಷಕರು ಮಕ್ಕಳಿಗೆ ಒಳ್ಳೆಯ ಶಿಕ್ಷಣವನ್ನು ನೀಡಲು ಮುಂದಾಗಬೇಕು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಒತ್ತಾಯಿಸಿದರು.
ಕೆಬಿಜಿ ಸ್ವಯಂಸೇವಕರು ಹಾಗೂ ಬ್ಯಾಟರಾಯನಪುರ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಆಶ್ರಯದಲ್ಲಿ ಸಹಕಾರನಗರದಲ್ಲಿ ಆಯೋಜಿಸಿದ್ದ ʼನಮ್ಮೂರ ಹೆಮ್ಮೆʼ ಕಾರ್ಯಕ್ರಮದಡಿಯಲ್ಲಿ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿಪತ್ರನೀಡಿ ಸನ್ಮಾನಿಸಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯ ಉತ್ತಮವಾಗಿ ರೂಪುಗೊಳ್ಳಲು ಹಾಗೂ ಅವರು ದೊಡ್ಡಮಟ್ಟದ ಯಶಸ್ಸನ್ನು ಸಾಧಿಸಲು ಶಿಕ್ಷಣವೊಂದೇ ಏಕೈಕ ಮಾರ್ಗವಾಗಿದೆ. ಶಿಕ್ಷಣವಿದ್ದರೆ ಮಕ್ಕಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ಅವರು ಅಭಿಪ್ರಾಯಪಟ್ಟರು.
ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಲು ವಿದ್ಯಾರ್ಥಿಗಳು ಸಾಕಷ್ಟು ಶ್ರಮಿಸುತ್ತಾರೆ. ಹೀಗಾಗಿ ಅವರ ಭವಿಷ್ಯ ಉತ್ತಮವಾಗಿರಲಿ ಎಂಬ ಕಾರಣಕ್ಕೆ ಹಾಗೂ ಅವರ ಶ್ರಮವನ್ನು ಗೌರವಿಸುವ ನಿಟ್ಟಿನಲ್ಲಿ ಸನ್ಮಾನಿಸಲಾಗುತ್ತಿದೆ. ಉತ್ತಮ ವಿದ್ಯಾರ್ಥಿಗಳನ್ನು ಮತ್ತಷ್ಟು ಉತ್ತೇಜಿಸುವುದರ ಜೊತೆಗೆ ಇತರರಿಗೆ ಸ್ಫೂರ್ತಿಯಾಗುವಂತೆ ಮಾಡುವುದೇ ಸಮ್ಮೂರ ಹೆಮ್ಮೆ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಈ ವರ್ಷದಲ್ಲಿ ವಿವಿಧ ವಾರ್ಡುಗಳ ಕನಿಷ್ಠ 4000 ವಿದ್ಯಾರ್ಥಿಗಳನ್ನು ಗುರುತಿಸಿ, ಸನ್ಮಾನಿಸಲಾಗುವುದು ಎಂದು ತಿಳಿಸಿದರು.
ಸಾಮಾಜಿಕ ಕಾರ್ಯಕರ್ತೆ ಮೀನಾಕ್ಷಿ ಶೇಷಾದ್ರಿ, ಕಾಂಗ್ರೆಸ್ ಮುಖಂಡರಾದ ಎನ್.ಎನ್.ಶ್ರೀನಿವಾಸಯ್ಯ, ಎಂ.ಜಯಗೋಪಾಲಗೌಡ, ಟಿ.ಜಿ.ಚಂದ್ರು, ಎಚ್.ಎ.ಶಿವಕುಮಾರ್, ಹನುಮಂತಿ, ವೆಂಕಟಸ್ವಾಮಿ, ಕೆ.ಆರ್.ರಾಜು, ಗೋಪಾಲ್ ರೆಡ್ಡಿ, ಕೆ.ಎ.ನಾಗೇಂದ್ರಕುಮಾರ್, ಕೆ.ದಿಲೀಪ್ಕುಮಾರ್, ತಿಂಡ್ಲು ಸತೀಶ್, ಕೆ.ಮಂಜುನಾಥ್ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.